ರಾಷ್ಟ್ರ ರಾಜಧಾನಿ ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ದೆಹಲಿ ನ್ಯಾಯಾಂಗ ಸೇವೆಯ ಯುವ ಅಧಿಕಾರಿ, ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ (30) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ವಿವರ :
ಸಫ್ದರ್ಜಂಗ್ ಎನ್ಕ್ಲೇವ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರೀನ್ ಪಾರ್ಕ್ನಲ್ಲಿರುವ ಮನೆಯ ಬಾತ್ರೂಂನಲ್ಲಿ ಅಮನ್ ಕುಮಾರ್ ಶರ್ಮಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಧ್ಯಾಹ್ನ 1.45ರ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ತಕ್ಷಣವೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಇದೊಂದು ಆತ್ಮಹತ್ಯೆಯಾಗಿದ್ದು, ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ.
ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ ಸೇವೆ :
ಮೃತ ಅಮನ್ ಕುಮಾರ್ ಶರ್ಮಾ ಅವರು 2021ರಲ್ಲಿ ದೆಹಲಿ ನ್ಯಾಯಾಂಗ ಸೇವೆಗೆ ಸೇರ್ಪಡೆಗೊಂಡಿದ್ದರು. ಸದ್ಯ ಅವರು ಕರ್ಕಾರ್ಡೂಮಾ ನ್ಯಾಯಾಲಯದ ಈಶಾನ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಪೂರ್ಣ ಸಮಯದ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅಮನ್, ಅಲ್ಪ ಕಾಲದಲ್ಲೇ ಕಾನೂನು ಸಮುದಾಯದಲ್ಲಿ ಉತ್ತಮ ಹೆಸರು ಗಳಿಸಿದ್ದರು.
ಕಾನೂನು ಲೋಕಕ್ಕೆ ಆಘಾತ :
ಯಾವುದೇ ಒತ್ತಡ ಅಥವಾ ವೈಯಕ್ತಿಕ ಕಾರಣಗಳ ಬಗ್ಗೆ ಮಾಹಿತಿ ಲಭ್ಯವಿಲ್ಲದ ಕಾರಣ, ಇಷ್ಟು ಸಣ್ಣ ವಯಸ್ಸಿನಲ್ಲೇ ನ್ಯಾಯಾಧೀಶರು ಇಂತಹ ನಿರ್ಧಾರ ಕೈಗೊಂಡಿರುವುದು ಇಡೀ ದೆಹಲಿ ನ್ಯಾಯಾಂಗ ವಲಯದಲ್ಲಿ ಆಘಾತ ಮೂಡಿಸಿದೆ. ಪ್ರಸ್ತುತ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.





