ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ನಟ ಮತ್ತು ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವು ಭರ್ಜರಿ ಗೆಲುವಿನ ಬಳಿಕ ಸರ್ಕಾರ ರಚನೆಯ ಸಿದ್ಧತೆ ಆರಂಭಿಸಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 108 ಕ್ಷೇತ್ರಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆ, ಇದೀಗ ಕಾಂಗ್ರೆಸ್ ಬೆಂಬಲದೊಂದಿಗೆ ಅಧಿಕಾರದ ಗದ್ದಿಗೆ ಏರಲು ಸಿದ್ಧವಾಗಿದೆ.
ಈ ಹಿನ್ನೆಲೆ, ಟಿವಿಕೆ ಮುಖ್ಯಸ್ಥ ವಿಜಯ್ ಅವರು ತಮಿಳುನಾಡು ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಚೆನ್ನೈನ ಲೋಕಭವನದಲ್ಲಿ ಭೇಟಿ ಮಾಡಿದರು. ಇಂದು ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಭೇಟಿ ಮಾಡಿದ್ದು, ಈ ವೇಳೆ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿ, ಪ್ರಮಾಣವಚನ ಸ್ವೀಕಾರದ ದಿನಾಂಕ ನಿಗದಿಪಡಿಸಲು ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ, ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ವಿಜಯ್ ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ನಾಯಕರು ಭಾಗವಹಿಸಿ, ವಿಜಯ್ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲು ಏಕಮತದಿಂದ ನಿರ್ಧರಿಸಿದರು.
ಕಾಂಗ್ರೆಸ್ ನಾಯಕರ ಪ್ರಕಾರ, ರಾಜ್ಯದಲ್ಲಿ ಸ್ಥಿರ ಸರ್ಕಾರ ರಚನೆಗೆ ಅಗತ್ಯವಾದ ಎಲ್ಲಾ ಬೆಂಬಲವನ್ನು ಒದಗಿಸಲು ಅವರು ಸಿದ್ಧರಾಗಿದ್ದಾರೆ. ಈ ಸಂಬಂಧ ಅಧಿಕೃತ ಮಾತುಕತೆಗಳು ಪೂರ್ಣಗೊಂಡಿದ್ದು, ಸರ್ಕಾರ ರಚನೆಗೆ ಯಾವುದೇ ಅಡಚಣೆ ಇಲ್ಲದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇನ್ನೊಂದೆಡೆ, ರಾಜ್ಯಪಾಲ ಅರ್ಲೇಕರ್ ಅವರು ವಿಜಯ್ ಸಲ್ಲಿಸಿದ ಹಕ್ಕು ಮಂಡನೆಯನ್ನು ಪರಿಶೀಲಿಸಿ, ಶೀಘ್ರದಲ್ಲೇ ಸರ್ಕಾರ ರಚನೆಗೆ ಆಹ್ವಾನ ನೀಡುವ ಸಾಧ್ಯತೆ ಇದೆ. ಎಲ್ಲಾ ಪ್ರಕ್ರಿಯೆಗಳು ಸುಗಮವಾಗಿ ನಡೆದರೆ, ಮುಂದಿನ ಕೆಲ ದಿನಗಳಲ್ಲಿ ವಿಜಯ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.





