ಬೆಂಗಳೂರು, ಮೇ 17, 2026: ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ನಗರವಾಗಿ ಬೆಂಗಳೂರನ್ನು ರೂಪಿಸಲು ನಾಗರಿಕರ ಸಕ್ರಿಯ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಹೇಳಿದ್ದಾರೆ. ನಗರದ ಚರ್ಚ್ ಸ್ಟ್ರೀಟ್ನಲ್ಲಿ ಸ್ವಚ್ಛ ಭಾರತ್ ಮಿಷನ್ ಅರ್ಬನ್ 2.0 ಅಡಿ ಆಯೋಜಿಸಲಾದ ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರ ಸ್ವಚ್ಛತೆಯ ಮಹತ್ವವನ್ನು ಹೇಳಿದರು.
ನಗರದ ಚರ್ಚ್ ಸ್ಟ್ರೀಟ್ನಲ್ಲಿ ಆಯೋಜಿಸಲಾದ ಸಮುದಾಯ ಬೀದಿ ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಲಮೂಲಗಳ ಸಂರಕ್ಷಣೆ, ತ್ಯಾಜ್ಯ ವಿಂಗಡಣೆ ಮತ್ತು ಸಮರ್ಪಕ ತ್ಯಾಜ್ಯ ನಿರ್ವಹಣೆ, ಏಕಬಳಕೆ ಪ್ಲಾಸ್ಟಿಕ್ ನಿಷೇಧ ಹಾಗೂ ಪ್ಲಾಸ್ಟಿಕ್ ಮರುಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಅನೇಕ ಕಡೆಗಳಲ್ಲಿ ಕಾಣಿಸಿಕೊಳ್ಳುತ್ತಿರುವ “ಬ್ಲ್ಯಾಕ್ ಸ್ಪಾಟ್”ಗಳು ಅಥವಾ ತ್ಯಾಜ್ಯ ಸುರಿಯುವ ಕಪ್ಪು ಚುಕ್ಕೆಗಳು ನಗರ ಸೌಂದರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕ ಆರೋಗ್ಯಕ್ಕೂ ದೊಡ್ಡ ಅಪಾಯವಾಗಿವೆ ಎಂದು ಅವರು ಎಚ್ಚರಿಕೆ ನೀಡಿದರು. ಇಂತಹ ಸಮಸ್ಯೆಗಳನ್ನು ತಡೆಯಲು ನಾಗರಿಕರ ಜವಾಬ್ದಾರಿ ನಿರ್ಣಾಯಕವಾಗಿದೆ ಎಂದು ಹೇಳಿದರು.
ಅಪಾರ್ಟ್ಮೆಂಟ್ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು, ಸ್ವಯಂಸೇವಾ ಸಂಸ್ಥೆಗಳು, ಎನ್ಜಿಒಗಳು ಹಾಗೂ ಸಾರ್ವಜನಿಕರು ಬಿಬಿಎಂಪಿಯೊಂದಿಗೆ ಕೈಜೋಡಿಸಿದರೆ ಮಾತ್ರ ಸ್ವಚ್ಛ ಬೆಂಗಳೂರಿನ ಕನಸು ಸಾಕಾರವಾಗುತ್ತದೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಪ್ರತಿಯೊಬ್ಬ ನಾಗರಿಕರು ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸಿ ನೀಡಬೇಕು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಜೊತೆಗೆ ಜಲಮೂಲಗಳ ಸಂರಕ್ಷಣೆಯ ಮೂಲಕ ಪರಿಸರ ಸಮತೋಲನವನ್ನು ಕಾಪಾಡುವುದು ಮುಂದಿನ ಪೀಳಿಗೆಗಾಗಿ ಅಗತ್ಯವಾದ ಹೆಜ್ಜೆಯಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತ ಅರಿವು ಹೆಚ್ಚಿಸುವ ಉದ್ದೇಶವನ್ನು ಹೊಂದಲಾಗಿದ್ದು, ಇಂತಹ ಜನಜಾಗೃತಿ ಕಾರ್ಯಕ್ರಮಗಳನ್ನು ನಗರದ ವಿವಿಧ ಭಾಗಗಳಲ್ಲಿ ಮುಂದುವರೆಸಲಾಗುತ್ತದೆ ಎಂದು ಅವರು ತಿಳಿಸಿದರು.





