ನವದೆಹಲಿ: ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಕರ್ನಾಟಕ ಸಿಎಂ ಕುರ್ಚಿ ಕದಾಟ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ತಕ್ಷಣ ಮುಖ್ಯಮಂತ್ರಿ ಬದಲಾವಣೆ ಅಥವಾ ನಾಯಕತ್ವ ಬದಲಾವಣೆ ಯಾವುದೇ ರೀತಿಯಲ್ಲಿ ನಡೆಯುವುದಿಲ್ಲ ಎಂಬ ಸೂಚನೆ ನೀಡಲಾಗಿದೆ ಎಂದು ಹೇಳಲಾಗ್ತಿದೆ. ಸದ್ಯದ ಆಡಳಿತ ಯಥಾಸ್ಥಿತಿಯಲ್ಲೇ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಭೆಯಲ್ಲಿ ಕರ್ನಾಟಕದ ನಾಯಕತ್ವ ಹಾಗೂ ಪಕ್ಷದ ಒಳಗಿನ ಬಣ ರಾಜಕೀಯ ವಿಚಾರಗಳು ಮುಖ್ಯವಾಗಿ ಚರ್ಚೆಗೆ ಬಂದವು. ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಗುಂಪುಗಾರಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಮುಖ್ಯ ಗುರಿ 2028ರ ವಿಧಾನಸಭಾ ಚುನಾವಣೆಯನ್ನು ಗೆಲ್ಲುವುದು ಎಂದು ಸ್ಪಷ್ಟಪಡಿಸಲಾಗಿದೆ.
ಸಭೆಯಲ್ಲಿ ನಾಯಕತ್ವ ಸಮೀಕರಣದ ಕುರಿತು ಚರ್ಚೆ ನಡೆದಿದ್ದು, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದೆ ಎಂದು ಹೇಳಲಾಗ್ತಿದೆ. ಜೊತೆಗೆ ಪಕ್ಷವನ್ನು ಬಲಪಡಿಸುವ ಮತ್ತು ಸಂಘಟನೆಯನ್ನು ತಳಮಟ್ಟದಿಂದ ಗಟ್ಟಿಗೊಳಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಅದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪಾತ್ರದ ಕುರಿತು ಕೂಡ ಮಹತ್ವದ ಚರ್ಚೆ ನಡೆದಿದೆ. 2028ರ ವಿಧಾನಸಭಾ ಚುನಾವಣೆಯ ನಂತರ ನಾಯಕತ್ವ ಬದಲಾವಣೆ ಕುರಿತು ಪರೋಕ್ಷ ಭರವಸೆ ನೀಡಲಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಆದರೆ ಅದುವರೆಗೆ ಯಾವುದೇ ತಕ್ಷಣದ ಬದಲಾವಣೆ ಇಲ್ಲ ಎಂಬುದು ಹೈಕಮಾಂಡ್ ನಿಲುವಾಗಿದೆ.
ಸಭೆಯಲ್ಲಿ ಸಚಿವ ಸಂಪುಟ ಪುನಾರಚನೆ (ಕ್ಯಾಬಿನೆಟ್ ಶಫಲ್) ಕುರಿತು ಕೂಡ ಚರ್ಚೆ ನಡೆದಿದೆ. ಕಾರ್ಯಕ್ಷಮತೆ ಮತ್ತು ನಿಷ್ಠೆಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಸೂಕ್ತ ಸಚಿವ ಸ್ಥಾನಮಾನ ನೀಡಲಾಗುವುದು ಎಂದು ಪಕ್ಷದ ನಾಯಕರು ಸೂಚಿಸಿದ್ದಾರೆ. ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಯಾವುದೇ ಅಸ್ಥಿರತೆ ಉಂಟಾಗದಂತೆ ನೋಡಿಕೊಳ್ಳುವುದು ಮುಖ್ಯ ಗುರಿ ಎಂದು ಹೇಳಲಾಗಿದೆ.
ಇನ್ನೊಂದೆಡೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮತ್ತು ಜಿಬಿಎ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ನಾಯಕತ್ವ ಸೂಚನೆ ನೀಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸುವ ಟಾರ್ಗೆಟ್ ರಾಜ್ಯ ನಾಯಕರಿಗೆ ನೀಡಲಾಗಿದೆ ಎಂದು ವರದಿಯಾಗಿದೆ.
ಸಭೆಯಲ್ಲಿನ ಹಿರಿಯ ನಾಯಕ ಮಲ್ಲಿಕಾರ್ಜುನ ಅವರ ರಾಜ್ಯ ರಾಜಕೀಯಕ್ಕೆ ಮರಳುವ ಸಾಧ್ಯತೆ ಕುರಿತ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಅವರು ಮತ್ತೆ ಕರ್ನಾಟಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸಭೆಯ ಬಳಿಕ ನಡೆದ ಒನ್ ಟು ಒನ್ ಚರ್ಚೆಯಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ನಡುವೆ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆದಿದೆ ಎಂಬ ಮಾಹಿತಿ ಹೊರಬಂದಿದೆ. ಈ ವೇಳೆ ಸರ್ಕಾರದ ಕಾರ್ಯಕ್ಷಮತೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪಕ್ಷದ ಸಂಘಟನೆ ಬಗ್ಗೆ ವಿವರವಾದ ವರದಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರು ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ನೇರ ಉತ್ತರ ನೀಡದೆ, ಪಕ್ಷದ ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸಲು ಸಿದ್ಧ ಎಂದು ಹೇಳಿದ್ದರು. ಆದರೆ ಸರ್ಕಾರದ ಸ್ಥಿರತೆಗೆ ಹಾನಿಯಾಗದಂತೆ ಯಾವುದೇ ತುರ್ತು ಬದಲಾವಣೆ ಮಾಡಬಾರದು ಎಂಬ ತಮ್ಮ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.





