ರಾಮನಗರ: ಕರ್ನಾಟಕ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಗೊಂದಲಗಳಿಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
ಇದರ ನಡುವೆ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ಅಧಿಕೃತ ಮುಹೂರ್ತ ನಿಗದಿಯಾಗಿದ್ದು, ಜೂನ್ 3ರಂದು ಸಂಜೆ ರಾಜಭವನದ ಗ್ಲಾಸ್ ಹೌಸ್ನಲ್ಲಿ ಸರಳ ಸಮಾರಂಭದಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವಿಧಾನಸೌಧದಿಂದ ರಾಜಭವನಕ್ಕೆ ಸ್ಥಳಾಂತರ
ಮೊದಲು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಭವ್ಯವಾಗಿ ಪ್ರಮಾಣವಚನ ಸಮಾರಂಭ ನಡೆಸಲು ಸಿದ್ಧತೆ ನಡೆದಿತ್ತು. ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸುವ ಯೋಜನೆಯೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಆಡಂಬರವನ್ನು ಕಡಿತಗೊಳಿಸಲು ಸೂಚಿಸಿದೆ. ಹೀಗಾಗಿ ಈಗ ರಾಜಭವನದಲ್ಲಿ ಅತ್ಯಂತ ಸರಳವಾಗಿ, ನಿಯಮಿತ ಅತಿಥಿಗಳೊಂದಿಗೆ ಪ್ರಮಾಣವಚನ ನಡೆಯಲಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದು, ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭ ಸರಳವಾಗಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು 10 ರಿಂದ 15 ಸಾವಿರ ಬಸ್ಗಳಲ್ಲಿ ಕಾರ್ಯಕರ್ತರನ್ನು ಬೆಂಗಳೂರಿಗೆ ಕರೆತರುವ ಯೋಜನೆಯೂ ಇದ್ದರೂ ಈಗ ಅದನ್ನು ಕೈಬಿಡಲಾಗಿದೆ.
ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಧನ್ಯವಾದ ಹೇಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.
ರಾಜಕೀಯದಲ್ಲಿ ಹೊಸ ಅಧ್ಯಾಯ
ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದರಿಂದ ಇದು ಕಾಂಗ್ರೆಸ್ ಪಕ್ಷದ ಒಳರಾಜಕೀಯದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸುವ ಕ್ಷಣವಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುವುದು, ಆಡಳಿತದ ವೇಗ ಹೆಚ್ಚಿಸುವುದು ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸುವುದು ಅವರ ಮುಂದಿನ ದೊಡ್ಡ ಸವಾಲುಗಳಾಗಿವೆ.





