ಬೆಂಗಳೂರು (ಮೇ 30): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆಯ ಬೆನ್ನಲ್ಲೇ ರಾಜಕೀಯದ ಮುಂದಿನ ಅಧ್ಯಾಯ ಆರಂಭವಾಗಿದೆ. ವಿಧಾನಸೌಧದಲ್ಲಿ ಇಂದು ನಡೆದ ಸಿಎಲ್ಪಿ ಸಭೆಯಲ್ಲಿ ಸರ್ವಾನುಮತದಿಂದ ನಾಯಕರಾಗಿ ಆಯ್ಕೆಯಾದ ನಂತರ, ಡಿಕೆಶಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರಿಗೆ ನಿವೇದನೆ:
ಸಿದ್ದರಾಮಯ್ಯ, ಜಿ. ಪರಮೇಶ್ವರ್ ಸೇರಿದಂತೆ ಹತ್ತು ಮಂದಿ ಕಾಂಗ್ರೆಸ್ ಹಿರಿಯ ನಾಯಕರ ಜೊತೆಗೂಡಿ ಡಿ.ಕೆ. ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದರು. ಅಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು. ಸಿಎಲ್ಪಿ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳ ಬಗ್ಗೆ ರಾಜ್ಯಪಾಲರಿಗೆ ಸಂಪೂರ್ಣ ಮಾಹಿತಿ ನೀಡಿದರು. ಸರ್ಕಾರ ರಚಿಸಲು ತಮಗೆ ಬಹುಮತವಿದೆ ಎಂದು ಮನವರಿಕೆ ಮಾಡಿಕೊಟ್ಟು ಹಕ್ಕು ಮಂಡಿಸಿದರು.
ರಾಜ್ಯಪಾಲರಿಂದ ಆಹ್ವಾನ
ರಾಜ್ಯಪಾಲರು ಡಿಕೆಶಿ ಅವರ ಹಕ್ಕನ್ನು ಮನ್ನಿಸಿ, ಸರ್ಕಾರ ರಚನೆಗೆ ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಮೂಲಕ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಾರಿ ಸುಗಮವಾಗಿದೆ.
ಪ್ರಮಾಣವಚನ ಕಾರ್ಯಕ್ರಮ
ಜೂನ್ 3, ಬುಧವಾರ, ಮಧ್ಯಾಹ್ನ 3 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸಮಾರಂಭವು ರಾಜಭವನದಲ್ಲಿ ನಡೆಯಲಿದ್ದು, ಸರಳವಾಗಿ ಕಾರ್ಯಕ್ರಮವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಗಣ್ಯರು ಈ ಸಂದರ್ಭದಲ್ಲಿ ಸಾಕ್ಷಿಯಾಗಲಿದ್ದಾರೆ.
ಸಿಎಲ್ಪಿ ಸಭೆಯ ಹಿನ್ನೆಲೆ
ವಿಧಾನಸೌಧದಲ್ಲಿ ನಡೆದ ಸಿಎಲ್ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೂತನ ನಾಯಕರಾಗಿ ಪ್ರಸ್ತಾಪಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಕ್ಷಣವೇ ಅನುಮೋದನೆ ನೀಡಿದರು. ಸಭೆಯಲ್ಲಿದ್ದ ಎಲ್ಲಾ ಶಾಸಕರು ಕೈ ಎತ್ತುವ ಮೂಲಕ ಒಮ್ಮತದ ಬೆಂಬಲ ವ್ಯಕ್ತಪಡಿಸಿದರು. ಈ ಸರ್ವಾನುಮತದ ಆಯ್ಕೆಯೇ ಇಂದು ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಲು ಬುನಾದಿಯಾಯಿತು.





