ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ ನಡೆದ ಹೈ-ವೋಲ್ಟೇಜ್ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯ ರಾಜಕೀಯದ ಪ್ರಮುಖ ನಾಯಕರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಸಾಕ್ಷಿಯಾಗಿದ್ದರು.
ಈ ಪ್ರಮಾಣವಚನ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗೆ ಅಧಿಕೃತವಾಗಿ ಪದಗ್ರಹಣ ಮಾಡಿದರು. ಅವರೊಂದಿಗೆ ಸಂಪುಟದ ಪ್ರಮುಖ ಸಚಿವರೂ ಕೂಡ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕದಲ್ಲಿ “ಡಿ.ಕೆ.ಶಿ ಯುಗ” ಆರಂಭವಾಗಿದೆ.
ಈ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ಒಟ್ಟು 13 ಶಾಸಕರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಚಿವರ ಪಟ್ಟಿಯಲ್ಲಿ ವಿವಿಧ ಸಮುದಾಯಗಳಿಗೆ ಸಮಾನ ಪ್ರತಿನಿಧಿತ್ವ ನೀಡುವ ಪ್ರಯತ್ನ ಕಂಡುಬಂದಿದೆ. ಒಕ್ಕಲಿಗ, ದಲಿತ ಮತ್ತು ಲಿಂಗಾಯತ ಸಮುದಾಯಗಳಿಗೆ ತಲಾ 3 ಸ್ಥಾನಗಳು ನೀಡಲಾಗಿದ್ದು, ಕುರುಬ ಸಮುದಾಯಕ್ಕೆ 2 ಸ್ಥಾನಗಳು ದೊರೆತಿವೆ. ಅಲ್ಪಸಂಖ್ಯಾತ ಹಾಗೂ ಕ್ರಿಶ್ಚಿಯನ್ ಸಮುದಾಯಗಳಿಗೆ ತಲಾ 1 ಸ್ಥಾನ ನೀಡಲಾಗಿದೆ. ವಾಲ್ಮೀಕಿ ಸಮುದಾಯಕ್ಕೂ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಮೊದಲ ಹಂತದ ಪಟ್ಟಿಯಲ್ಲಿ ಮಹಿಳಾ ಶಾಸಕರಿಗೆ ಸ್ಥಾನ ದೊರೆತಿದೆ.
ಸಚಿವ ಸಂಪುಟದಲ್ಲಿ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಯು.ಟಿ. ಖಾದರ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಮತ್ತು ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ.
ಈ ಸರ್ಕಾರದ ರಚನೆ ವೇಳೆ ಹೈಕಮಾಂಡ್ ಮಟ್ಟದಲ್ಲಿ ಸಮುದಾಯ ಸಮತೋಲನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗಿದೆ. ಆದರೆ ಕೆಲ ಪ್ರಮುಖ ಮಹಿಳಾ ನಾಯಕರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಕೈ ತಪ್ಪಿರುವುದು ಪಕ್ಷದೊಳಗಿನ ಚರ್ಚೆಗೆ ಕಾರಣವಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕೆಲವು ಮಹಿಳಾ ನಾಯಕರು ತೀವ್ರ ಲಾಬಿ ನಡೆಸಿದ್ದರೂ ಮೊದಲ ಪಟ್ಟಿಯಲ್ಲಿ ಅವಕಾಶ ದೊರೆಯಲಿಲ್ಲ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಮುಂದಿನ ಸಂಪುಟ ವಿಸ್ತರಣೆಯಲ್ಲಿ ಇವರಿಗೆ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.




