ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಐತಿಹಾಸಿಕ ಬದಲಾವಣೆಯಾಗಿದೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ.
ಪ್ರಧಾನಿ ಮೋದಿ ಹೇಳಿದ್ದೇನು?
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಪ್ರಧಾನಿ ಮೋದಿ ತಮ್ಮ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಕನ್ನಡದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. “ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಮುಂಬರುವ ಆಡಳಿತದ ಅವಧಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. “ಕರ್ನಾಟಕದ ಜನರ ಕಲ್ಯಾಣ ಮತ್ತು ಒಳಿತಿಗಾಗಿ ಕೇಂದ್ರ ಸರ್ಕಾರವು ಮುಂಬರುವ ದಿನಗಳಲ್ಲಿ ರಾಜ್ಯ ಸರ್ಕಾರದೊಂದಿಗೆ ಅತ್ಯಂತ ನಿಕಟವಾಗಿ ಕೈಜೋಡಿಸಿ ಕೆಲಸ ಮಾಡಲಿದೆ” ಎಂದು ಅವರು ಹೇಳಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ.@DKShivakumar
— Narendra Modi (@narendramodi) June 3, 2026
ಡಿಕೆಶಿಗೆ ಸೋನಿಯಾ ಗಾಂಧಿಯ ಶುಭಾಶಯ ಮತ್ತು ಕಿವಿಮಾತು
ಪ್ರಧಾನಿ ಮೋದಿಯವರ ಶುಭಾಶಯಕ್ಕೂ ಮೊದಲು, ಕಾಂಗ್ರೆಸ್ನ ವರಿಷ್ಠರಾದ ಸೋನಿಯಾ ಗಾಂಧಿ ಅವರು ಡಿಕೆಶಿ ಅವರಿಗೆ ಬುಧವಾರ ದೂರವಾಣಿ ಕರೆ ಮಾಡಿ ಮನಃಪೂರ್ವಕವಾಗಿ ಶುಭ ಹಾರೈಸಿದ್ದರು. ದೆಹಲಿ ರಾಜಕಾರಣದಲ್ಲಿ ಡಿಕೆಶಿ ಅವರ ನಿಷ್ಠೆಯನ್ನು ಯಾವಾಗಲೂ ಗೌರವಿಸುವ ಸೋನಿಯಾ, ಅಧಿಕಾರ ಗ್ರಹಣದ ಈ ಐತಿಹಾಸಿಕ ಕ್ಷಣದಲ್ಲಿ ಖುದ್ದಾಗಿ ಮಾತನಾಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಉತ್ಸಾಹ ತುಂಬಿದೆ.
ದೂರವಾಣಿ ಸಂಭಾಷಣೆಯ ವೇಳೆ ಸೋನಿಯಾ ಗಾಂಧಿ ಅವರು ಡಿಕೆಶಿಗೆ ಮಹತ್ವದ ‘ಕಿವಿಮಾತು’ ಹೇಳಿದ್ದಾರೆ. “ಪಕ್ಷ ಹಾಗೂ ಸರ್ಕಾರದ ಹಂತದಲ್ಲಿ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನು ನೀವು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆ ಸಿಕ್ಕಿರುವ ಈ ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ನಿಮ್ಮದಾಗಲಿ” ಎಂದು ಹಾರೈಸಿ ಆತ್ಮೀಯವಾಗಿ ಶುಭಾಶಯ ತಿಳಿಸಿದ್ದಾರೆ.
‘ಟ್ರಬಲ್ ಶೂಟರ್’ ಖ್ಯಾತಿಯ ಡಿಕೆಶಿ ಅವರು ಪಕ್ಷದ ಸಂಘಟನೆಯಲ್ಲಿ ನಿರಂತರ ಸೇವೆ ಸಲ್ಲಿಸಿದ ಫಲವಾಗಿ ರಾಜ್ಯದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ.




