ರಾಮನಗರ: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕರಿಗೆ ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಹೃದಯಕ್ಕೆ ರಕ್ತ ಪೂರೈಸುವ ರಕ್ತನಾಳಗಳಲ್ಲಿ ಬ್ಲಾಕೇಜ್ ಇರುವುದನ್ನು ಪತ್ತೆಹಚ್ಚಿದ್ದಾರೆ.
ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದೆ ಎಂಬ ಮಾಹಿತಿ ಆರಂಭದಲ್ಲಿ ಹರಿದಾಡಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ವೈದ್ಯರು, ಅವರಿಗೆ ಹೃದಯಾಘಾತವಾಗಿಲ್ಲ ಎಂದು ತಿಳಿಸಿದ್ದಾರೆ. ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳಲ್ಲಿ ಅಡಚಣೆ ಉಂಟಾಗಿರುವುದು ಪತ್ತೆಯಾಗಿದ್ದು, ಅದಕ್ಕೆ ಅಗತ್ಯವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, “ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಕಳೆದ ಎರಡು ದಿನಗಳಿಂದ ಎದೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡರು. ಬಳಿಕ ಆಂಜಿಯೋಗ್ರಾಂ ಪರೀಕ್ಷೆ ನಡೆಸಿದಾಗ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ ಇರುವುದು ದೃಢಪಟ್ಟಿದೆ. ಆದರೆ ಇದು ಹಾರ್ಟ್ ಅಟ್ಯಾಕ್ ಅಲ್ಲ” ಎಂದು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಅವರು, “ಶಾಸಕರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ಆಂಜಿಯೋಗ್ರಾಂ ವರದಿಯ ಆಧಾರದ ಮೇಲೆ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅವರಿಗೆ ಬೈಪಾಸ್ ಸರ್ಜರಿ ನಡೆಸುವ ಅಗತ್ಯವಿದೆ. ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡುವ ಕುರಿತು ವೈದ್ಯರ ತಂಡ ಚರ್ಚೆ ನಡೆಸುತ್ತಿದೆ” ಎಂದು ತಿಳಿಸಿದರು.
ಬೈಪಾಸ್ ಶಸ್ತ್ರಚಿಕಿತ್ಸೆಯ ನಂತರ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಶಾಸಕರ ಆರೋಗ್ಯದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಹಲವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ರಾಮನಗರ ಕ್ಷೇತ್ರದ ಜನಪ್ರಿಯ ಶಾಸಕರಾಗಿರುವ ಇಕ್ಬಾಲ್ ಹುಸೇನ್ ಅವರು ಹಲವು ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ಸಂಪರ್ಕದಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ಉಂಟಾದ ಏರುಪೇರಿಯಿಂದ ಕ್ಷೇತ್ರದ ಜನರು ಹಾಗೂ ಬೆಂಬಲಿಗರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.





