ದೆಹಲಿ (ಜುಲೈ 14): ಅಮೆರಿಕ-ಇರಾನ್ ನಡುವಿನ ಯುದ್ದ ಇದೀಗ ಮತ್ತೆ ಮುಂದುವರೆಯುವ ಎಲ್ಲಾ ಲಕ್ಷಣ ಕಾಣುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತೀಯ ನಾವಿಕರಿದ್ದ ಎರಡು ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹಾಗೆಯೇ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಸಮನ್ಸ್ ಕೂಡ ನೀಡಿದೆ.
ಭಾರತದ ಪ್ರತಿಕ್ರಿಯೆ ಏನು?
ಭಾರತೀಯ ವಿದೇಶಾಂಗ ಸಚಿವಾಲಯದ (MEA) ಮಾಹಿತಿ ಪ್ರಕಾರ, ಯುಎಇ ಧ್ವಜ ಹೊಂದಿದ್ದ ಎಂವಿ ಅಲ್ ಬಾಹಿಯಾ (MT Al Bahiyah) ಮತ್ತು ಎಂವಿ ಮೊಂಬಾಸಾ (MT Mombasa) ಹಡಗುಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯನ್ನು ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಕ್ತ ನೌಕಾಯಾನಕ್ಕೆ ಧಕ್ಕೆ ತರುವ ಗಂಭೀರ ಕೃತ್ಯ ಎಂದು ಭಾರತ ಬಣ್ಣಿಸಿದೆ.
ಎಂವಿ ಅಲ್ ಬಾಹಿಯಾ ಹಡಗಿನಲ್ಲಿದ್ದ 12 ಭಾರತೀಯ ಸಿಬ್ಬಂದಿಯ ಪೈಕಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಎಂವಿ ಮೊಂಬಾಸಾ ಹಡಗಿನಲ್ಲಿದ್ದ 18 ಭಾರತೀಯರ ಪೈಕಿ 9 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ನಾವಿಕನ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಭಾರತ, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಮತ್ತು ದೂತಾವಾಸದ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಇರಾನ್ ರಾಯಭಾರ ಕಚೇರಿಗೆ ಸಮನ್ಸ್ ನೀಡಿದ ಭಾರತ
ಘಟನೆಯ ಬಳಿಕ ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ ಮೊಹಮ್ಮದ್ ಜವಾದ್ ಹೊಸೇನಿ ಅವರನ್ನು ವಿದೇಶಾಂಗ ಸಚಿವಾಲಯ ಸಮನ್ಸ್ ನೀಡಿ ಕರೆಸಿಕೊಂಡಿದೆ. ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಸ್ಪಷ್ಟ ಸಂದೇಶ ರವಾನಿಸಿದೆ.
ಇದೇ ವೇಳೆ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆ ಮರುಸ್ಥಾಪಿಸಲು ಎಲ್ಲ ರಾಷ್ಟ್ರಗಳು ಯುದ್ಧದ ಬದಲಾಗಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತ ಸಲಹೆ ನೀಡಿದೆ. ಸಮುದ್ರ ಮಾರ್ಗಗಳ ಸುರಕ್ಷತೆ ಜಾಗತಿಕ ವ್ಯಾಪಾರದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ವಿದೇಶಾಂಗ ಸಚಿವಾಲಯ ಒತ್ತಿ ಹೇಳಿದೆ.
ತನ್ನ ದಾಳಿಯನ್ನು ಸಮರ್ಥಿಸಿಕೊಂಡ ಇರಾನ್
ಇತ್ತ, ಈ ಎರಡು ಹಡಗುಗಳ ಮೇಲೆ ದಾಳಿ ನಡೆಸಿರುವುದನ್ನು ಇರಾನ್ ಒಪ್ಪಿಕೊಂಡಿದ್ದು, ತನ್ನ ನೌಕಾಯಾನ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಕಾರಣ ಕ್ರಮ ಕೈಗೊಂಡಿದ್ದೇವೆ ಎಂದು ಸಮರ್ಥಿಸಿಕೊಂಡಿದೆ. ಆದರೆ ಯುಎಇ ಈ ದಾಳಿಯನ್ನು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಖಂಡಿಸಿದ್ದು, ಗಲ್ಫ್ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚುವ ಆತಂಕ ವ್ಯಕ್ತಪಡಿಸಿದೆ.
ವಿಶ್ವದ ಸುಮಾರು ಶೇ.20ರಷ್ಟು ಕಚ್ಚಾ ತೈಲ ಮತ್ತು ಎಲ್ಎನ್ಜಿ (LNG) ಸಾಗಣೆ ನಡೆಯುವ ಹಾರ್ಮುಜ್ ಜಲಸಂಧಿಯಲ್ಲಿ ಇಂತಹ ದಾಳಿಗಳು ಜಾಗತಿಕ ಇಂಧನ ಪೂರೈಕೆ, ಸಮುದ್ರ ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ಆರ್ಥಿಕತೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.





