ಬೆಂಗಳೂರು, ಜುಲೈ 17: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ವಿಚಾರಿಸಲು ವಿಪಕ್ಷದ ನಾಯಕ ಆರ್. ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಆಸ್ಪತ್ರೆಯಲ್ಲಿ ವೈದ್ಯರಿಂದ ಆರೋಗ್ಯದ ಕುರಿತು ಮಾಹಿತಿ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ಅಶೋಕ್, “ಮೊನ್ನೆ ಅವರ ಆರೋಗ್ಯ ಅತ್ಯಂತ ಗಂಭೀರವಾಗಿತ್ತು. ಆದರೆ ನಿನ್ನೆಗಿಂತ ಇಂದು ಸ್ವಲ್ಪ ಸುಧಾರಣೆ ಕಂಡುಬಂದಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ನಾಳೆ ಆರೋಗ್ಯ ಸ್ಥಿತಿಯ ಕುರಿತು ವೈದ್ಯರು ಮತ್ತಷ್ಟು ಮಾಹಿತಿ ನೀಡಲಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆಯ ಲಕ್ಷಣಗಳಿವೆ” ಎಂದು ತಿಳಿಸಿದರು.
ಅದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಹೆಚ್.ಡಿ. ರೇವಣ್ಣ ಅವರೊಂದಿಗೆ ಮಾತನಾಡಿದ್ದು, ವೈದ್ಯರ ತಂಡ ನೀಡುತ್ತಿರುವ ಚಿಕಿತ್ಸೆಯ ಕುರಿತು ಮಾಹಿತಿ ಪಡೆದಿರುವುದಾಗಿ ಅಶೋಕ್ ಹೇಳಿದರು.
ಇನ್ನೊಂದೆಡೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರಿನಲ್ಲಿ ಕಾರ್ಯಕ್ರಮದಲ್ಲಿದ್ದ ವೇಳೆ ತಾಯಿಯ ಆರೋಗ್ಯ ಹದಗೆಟ್ಟಿರುವ ಮಾಹಿತಿ ತಿಳಿದ ತಕ್ಷಣ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಆಗಮಿಸಿ ನೇರವಾಗಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದರು. ಶಾಸಕ ಹೆಚ್.ಡಿ. ರೇವಣ್ಣ ಕೂಡ ವಿಧಾನಸೌಧದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಸೇರಿದಂತೆ ದೇವೇಗೌಡ ಕುಟುಂಬದ ಇತರ ಸದಸ್ಯರೂ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು.
ಮೂಲಗಳ ಪ್ರಕಾರ, ಕಳೆದ ಮೂರು ದಿನಗಳಿಂದ ಚೆನ್ನಮ್ಮ ದೇವೇಗೌಡ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಹಠಾತ್ ಏರುಪೇರಾದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರು.
ಸದ್ಯ ತಜ್ಞ ವೈದ್ಯರ ತಂಡ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ವೈದ್ಯರ ಮಾಹಿತಿಯಂತೆ, ಚಿಕಿತ್ಸೆಗಳಿಗೆ ಸ್ಪಂದನೆ ದೊರೆಯುತ್ತಿರುವುದರಿಂದ ಕುಟುಂಬ ಸದಸ್ಯರಲ್ಲಿ ಆಶಾಭಾವನೆ ಮೂಡಿದೆ. ವೈದ್ಯರ ತಂಡ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.





