ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಮತ್ತೊಂದು ಘಟನೆ ಸಂಭವಿಸಿದ್ದು, ಉಕ್ರೇನ್ನ ದಕ್ಷಿಣ ಭಾಗದಲ್ಲಿರುವ ಒಡೆಸಾ ಬಂದರಿನಿಂದ ಹೊರಟಿದ್ದ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ಕ್ಷಿಪಣಿ ದಾಳಿ ನಡೆದಿದೆ. ನಾಲ್ವರು ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಮತ್ತೋರ್ವ ಭಾರತೀಯ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಭಾರತದಲ್ಲಿ ಆತಂಕ ಮೂಡಿಸಿದ್ದು, ಕೇಂದ್ರ ಸರ್ಕಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ಮಾಹಿತಿಯ ಪ್ರಕಾರ, ಗಿನಿಯಾ-ಬಿಸ್ಸೌ ಧ್ವಜದಡಿ ಕಾರ್ಯನಿರ್ವಹಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರತೀಯರು ಹಾಗೂ ಸಿರಿಯಾದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಜುಲೈ 19ರಂದು ಒಡೆಸಾ ಬಂದರಿನಿಂದ ಹಡಗು ಸಮುದ್ರಯಾನ ಆರಂಭಿಸಿದ ಕೆಲವೇ ಸಮಯದಲ್ಲಿ ಅದರ ಮೇಲೆ ಮೂರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ. ದಾಳಿಯಿಂದ ಹಡಗು ತೀವ್ರ ಹಾನಿಗೊಳಗಾಗಿದ್ದು, ನಾಲ್ವರು ಭಾರತೀಯ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ವಾಣಿಜ್ಯ ಸಾಗಣೆಯನ್ನು ಗುರಿಯಾಗಿಸಿಕೊಂಡು ನಾಗರಿಕ ಸಿಬ್ಬಂದಿಯ ಜೀವಕ್ಕೆ ಅಪಾಯ ಉಂಟುಮಾಡುವ ಯಾವುದೇ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.
“ನಿರಪರಾಧ ನಾಗರಿಕ ಸಿಬ್ಬಂದಿಯ ಸುರಕ್ಷತೆಗೆ ಧಕ್ಕೆ ತರುವಂತಹ ದಾಳಿಗಳು, ಅಂತರರಾಷ್ಟ್ರೀಯ ಸಮುದ್ರ ಸಂಚಾರದ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ಕ್ರಮಗಳು ಹಾಗೂ ಜಾಗತಿಕ ವ್ಯಾಪಾರಕ್ಕೆ ತೊಂದರೆ ಉಂಟುಮಾಡುವ ಯಾವುದೇ ಕೃತ್ಯಗಳು ಅತ್ಯಂತ ಶೋಚನೀಯ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲ ರಾಷ್ಟ್ರಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು,” ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಗಾಯಗೊಂಡಿರುವ ಭಾರತೀಯನಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸುವ ಜೊತೆಗೆ ಮೃತರ ಕುಟುಂಬಗಳಿಗೆ ಸಹಾಯ ಮಾಡುವ ಕ್ರಮಗಳನ್ನು ಕೈಗೊಂಡಿದೆ. ಮೃತದೇಹಗಳನ್ನು ಭಾರತಕ್ಕೆ ತರಿಸುವ ಪ್ರಕ್ರಿಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ನೆರವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ಮೃತರಾದ ನಾಲ್ವರು ಭಾರತೀಯರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಆಳವಾದ ಸಂತಾಪ ಸೂಚಿಸಿದೆ. ಗಾಯಗೊಂಡಿರುವ ಭಾರತೀಯ ಸಿಬ್ಬಂದಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿರುವ ವಿದೇಶಾಂಗ ಸಚಿವಾಲಯ, ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದೆ.
ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ಬಳಿಕ ಕಪ್ಪು ಸಮುದ್ರ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲಿನ ಅಪಾಯಗಳು ಹೆಚ್ಚುತ್ತಿವೆ. ಧಾನ್ಯ, ತೈಲ ಹಾಗೂ ಇತರ ಸರಕು ಸಾಗಿಸುವ ಹಡಗುಗಳು ಯುದ್ಧದ ಪರಿಣಾಮದಿಂದ ಹಲವು ಬಾರಿ ದಾಳಿಗೆ ಒಳಗಾಗಿರುವ ಘಟನೆಗಳು ನಡೆದಿವೆ.
ಭಾರತವು ಆರಂಭದಿಂದಲೂ ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವಂತೆ ಕರೆ ನೀಡುತ್ತಿದ್ದು, ಸಂವಾದ ಮತ್ತು ರಾಜತಾಂತ್ರಿಕ ಮಾರ್ಗವೇ ಶಾಶ್ವತ ಪರಿಹಾರ ಎಂಬ ನಿಲುವನ್ನು ಪುನರುಚ್ಚರಿಸಿದೆ.





