ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಕ್ಕಳ ಸುರಕ್ಷತೆ ಕುರಿತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ರಾಯಚೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿವೆ. ಕೆಲವೇ ದಿನಗಳ ಹಿಂದೆ ರಾಯಚೂರಿನಲ್ಲಿ ಬೀದಿನಾಯಿಗಳ ದಾಳಿಯಿಂದ ಒಂದೂವರೆ ವರ್ಷದ ಬಾಲಕಿ ಮೃತಪಟ್ಟ ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ, ಇದೀಗ ಮತ್ತೊಮ್ಮೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ರಾಯಚೂರು ಜಿಲ್ಲೆಯ ಹೊರವಲಯದ ಮಲಿಯಾಬಾದ್ ಪ್ರದೇಶದಲ್ಲಿ ಸೋಮವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ನಾಲ್ಕು ವರ್ಷದ ಗೋಪಾಲ್ ಎಂಬ ಬಾಲಕನ ಮೇಲೆ ಬೀದಿನಾಯಿಗಳ ಗುಂಪು ಏಕಾಏಕಿ ಎರಗಿದೆ. ದಾಳಿಯ ವೇಳೆ ಬಾಲಕನ ತಲೆಗೆ ತೀವ್ರ ಗಾಯಗಳಾಗಿದ್ದು, ತಲೆಯ ಚರ್ಮಕ್ಕೆ ಗಂಭೀರ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳೀಯರು ತಕ್ಷಣ ಬಾಲಕನನ್ನು ರಕ್ಷಿಸಿ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ ಬಾಲಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ನಿರಂತರ ನಿಗಾದಲ್ಲಿ ಇರಿಸಲಾಗಿದೆ.
ಈ ಘಟನೆ ಬಳಿಕ ಸ್ಥಳೀಯ ನಿವಾಸಿಗಳು ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದ್ದರೂ, ಅವುಗಳನ್ನು ನಿಯಂತ್ರಿಸಲು ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ತಕ್ಷಣವೇ ಬೀದಿನಾಯಿಗಳನ್ನು ಸೆರೆಹಿಡಿದು ಸಾರ್ವಜನಿಕರ ಸುರಕ್ಷತೆ ಖಚಿತಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನೊಂದೆಡೆ ಚಿತ್ರದುರ್ಗ ನಗರದಲ್ಲಿಯೂ ಬೀದಿನಾಯಿಗಳ ಹಾವಳಿ ತೀವ್ರಗೊಂಡಿದೆ. ಒಂದೇ ದಿನದಲ್ಲಿ ನಾಲ್ವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಚೇಳಗುಡ್ಡ ಹಾಗೂ ನೆಹರುನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಐದರಿಂದ ಆರು ವರ್ಷದೊಳಗಿನ ಮಕ್ಕಳು ಗಾಯಗೊಂಡಿದ್ದಾರೆ. ಆಲೀನಾ, ಆದಿಲ್, ಮನ್ವಿತ್ ಸೇರಿದಂತೆ ನಾಲ್ವರು ಮಕ್ಕಳಿಗೆ ನಾಯಿ ಕಡಿತದಿಂದ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆಯೇ ನಾಯಿಗಳು ದಾಳಿ ನಡೆಸಿರುವುದರಿಂದ ಪೋಷಕರಲ್ಲಿ ಭಯ ಮತ್ತಷ್ಟು ಹೆಚ್ಚಾಗಿದೆ. ಮಕ್ಕಳನ್ನು ಮನೆಯ ಹೊರಗೆ ಕಳುಹಿಸಲು ಸಹ ಹೆದರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ಮತ್ತು ಜಿಲ್ಲಾಡಳಿತ ಬೀದಿನಾಯಿಗಳ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಇದಲ್ಲದೆ, ನಾಯಿ ಕಡಿತಕ್ಕೆ ಅಗತ್ಯವಾಗಿರುವ ಆಂಟಿ-ರೇಬೀಸ್ ಲಸಿಕೆ ಮತ್ತು ಇಂಜೆಕ್ಷನ್ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಪರಿಣಾಮವಾಗಿ ಗಾಯಾಳು ಮಕ್ಕಳ ಕುಟುಂಬಸ್ಥರು ಹೊರಗಿನಿಂದ ಔಷಧಿಗಳನ್ನು ಖರೀದಿಸಿ ತರಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಸ್ಥಳೀಯ ಆಡಳಿತಗಳು ತುರ್ತು ಕ್ರಮ ಕೈಗೊಂಡು ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸುವುದು, ಅಗತ್ಯ ಲಸಿಕೆಗಳ ಲಭ್ಯತೆ ಖಚಿತಪಡಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.





