ಮಂಡ್ಯ (ಜುಲೈ 23): ಕಳೆದ ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಈ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿತ್ತು. ಆದರೆ ಇದೀಗ ಮತ್ತೆ ಮುಂಗಾರು ಮಳೆ ಕೈಕೊಟ್ಟು ಹಿನ್ನಲೆಯಲ್ಲಿ ರೈತರಿಗೆ ದಿಕ್ಕು ತೋಚದಂತಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಪ್ರಮುಖ ಜಲಾಶಯಗಳಾದ KRS, ಕಬಿನಿ ಹಾಗೂ ಹೇಮಾವತಿ ಅಣೆಕಟ್ಟುಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ. ಇದರ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿಂಷಾ–ಶಿವನಸಮುದ್ರ ಜಲವಿದ್ಯುತ್ ಘಟಕದಲ್ಲಿ ಕಳೆದ ಒಂದು ತಿಂಗಳಿಂದ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಂಡಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಏಷ್ಯಾದ ಮೊದಲ ಜಲವಿದ್ಯುತ್ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿವನ ಸಮುದ್ರ ವಿದ್ಯುತ್ ಕೇಂದ್ರದಲ್ಲಿ ನೀರಿನ ಕೊರತೆಯಿಂದ ಟರ್ಬೈನ್ಗಳನ್ನು ಸ್ಥಗಿತಗೊಳಿಸಲಾಗಿದೆ. ಇಲ್ಲಿ ಒಟ್ಟು 10 ವಿದ್ಯುತ್ ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ವಾರ್ಷಿಕವಾಗಿ ಸುಮಾರು 518 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಇದೀಗ ನೀರಿನ ಅಭಾವದಿಂದ ಉತ್ಪಾದನೆ ನಿಂತಿರುವುದು ರಾಜ್ಯದ ವಿದ್ಯುತ್ ವ್ಯವಸ್ಥೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೊಡಗು ಹಾಗೂ ಕೇರಳದ ವೈನಾಡು ಭಾಗದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿದಿರುವುದರಿಂದ KRS ಹಾಗೂ ಕಬಿನಿ ಜಲಾಶಯಗಳಿಗೆ ಹರಿದು ಬರುತ್ತಿದ್ದ ಒಳಹರಿವು ಕಳೆದ ವಾರಕ್ಕೆ ಹೋಲಿಸಿದರೆ ಗಣನೀಯವಾಗಿ ಇಳಿಕೆಯಾಗಿದೆ. ಪರಿಣಾಮವಾಗಿ ಜಲಾಶಯಗಳ ನೀರಿನ ಮಟ್ಟ ಕಳೆದ ವರ್ಷದಷ್ಟೂ ಏರಿಕೆಯಾಗಿಲ್ಲ.
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ KRS ಅಣೆಕಟ್ಟಿಗೂ ನೀರಿನ ಹರಿವು ಕಡಿಮೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆದಾಗ್ಯೂ, ಸದ್ಯಕ್ಕೆ ಕುಡಿಯುವ ನೀರು ಹಾಗೂ ಅಗತ್ಯ ಬಳಕೆಗೆ ಜಲಾಶಯಗಳಿಂದ ನೀರು ಬಿಡುಗಡೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಕೊರತೆಯಿಂದ ರೈತರು ಕೂಡ ಆತಂಕಕ್ಕೊಳಗಾಗಿದ್ದು, ನೀರಾವರಿ ಹಾಗೂ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ, ಭಾರತೀಯ ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿ ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚುವ ನಿರೀಕ್ಷೆ ಮೂಡಿಸಿದೆ.
ಆದರೆ ಇದೇ ರೀತಿಯಲ್ಲಿ ಮುಂಗಾರು ಮಳೆ ಕೈಕೊಟ್ಟರೆ ಬರಗಾಲ ಎದುರಾದರೆ, ಮುಂದಿನ ದಿನಗಳಲ್ಲಿ ಜನರಿಗೆ ಕುಡಿಯುವ ನೀರಿಗೂ ಕೂಡಾ ಪರದಾಡುವಂತಹ ಪರಿಸ್ಥಿತಿ ಎದುರಾಗುವ ಭೀತಿ ಕಾಡುತ್ತಿದೆ.





