ಶಿಮ್ಲಾ, (ಜುಲೈ 24): ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ನಡುವೆ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಲಾಹಾಲ್-ಸ್ಪಿತಿ ಜಿಲ್ಲೆಯ ಉದಯಪುರ–ಕಿಲ್ಲಾರ್ ರಸ್ತೆಯ ಕಡು ನಾಲಾ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಟ್ಯಾಕ್ಸಿಯ ಮೇಲೆ ಭಾರೀ ಬಂಡೆಗಳು ಉರುಳಿ ಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿಯ ಪ್ರಕಾರ, ಚಂಬಾ ಜಿಲ್ಲೆಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೊ ಟ್ಯಾಕ್ಸಿ ಕಡು ನಾಲಾ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಭೂಕುಸಿತ ಸಂಭವಿಸಿದೆ. ಭಾರಿ ಗಾತ್ರದ ಬಂಡೆಗಳು ನೇರವಾಗಿ ವಾಹನದ ಮೇಲೆ ಬಿದ್ದ ಪರಿಣಾಮ ಟ್ಯಾಕ್ಸಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡರು.
ಭೂಕುಸಿತದ ಕಾರಣದಿಂದ ಗುರುವಾರ ರಾತ್ರಿ ಉದಯಪುರ–ಕಿಲ್ಲಾರ್ ರಸ್ತೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಲಾಗಿತ್ತು. ಬಳಿಕ ರಸ್ತೆ ಸಂಚಾರಕ್ಕೆ ತೆರೆಯುತ್ತಿದ್ದಂತೆಯೇ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಸ್ಥಳೀಯ ಪೊಲೀಸರು, ಆಡಳಿತಾಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ಪಡೆಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು. ಕಾರ್ಯಾಚರಣೆಯ ವೇಳೆ 13 ಮಂದಿ ಮೃತಪಟ್ಟಿರುವುದು ಹಾಗೂ ಇಬ್ಬರು ಗಂಭೀರವಾಗಿ ಗಾಯಗೊಂಡಿರುವುದು ದೃಢಪಟ್ಟಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಜನಕ ರಾಜ್, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಚಂಬಾ ಹಾಗೂ ಲಾಹಾಲ್-ಸ್ಪಿತಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ
ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭೂಕುಸಿತ ಮತ್ತು ರಸ್ತೆ ಬಂದ್ ಘಟನೆಗಳು ಹೆಚ್ಚುತ್ತಿವೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮಾಹಿತಿ ಪ್ರಕಾರ, ರಾಜ್ಯದಾದ್ಯಂತ 130ಕ್ಕೂ ಹೆಚ್ಚು ರಸ್ತೆಗಳು ಸಂಚಾರಕ್ಕೆ ಬಂದ್ ಆಗಿದ್ದು, 64 ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು ಹಾನಿಗೊಳಗಾಗಿವೆ.
ಭಾರತೀಯ ಹವಾಮಾನ ಇಲಾಖೆ (IMD) ಜುಲೈ 26ರವರೆಗೆ ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದ್ದು, ಜುಲೈ 27ರಿಂದ 29ರವರೆಗೆ ಆರೆಂಜ್ ಅಲರ್ಟ್ ನೀಡಿದೆ. ಈ ಅವಧಿಯಲ್ಲಿ ಭಾರೀ ಮಳೆ ಹಾಗೂ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚಿಸಿದೆ.





