ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಅನಿಶ್ಚಿತ ಪರಿಸ್ಥಿತಿ ಹಾಗೂ ಅದರ ಪರಿಣಾಮ ಭಾರತಕ್ಕೆ ತಟ್ಟದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭದ್ರತಾ ಸಂಪುಟ ಸಮಿತಿಯ (CCS) ನಾಲ್ಕನೇ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದರು. ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಗೆ ಸಂಬಂಧಿಸಿದಂತೆ ಇದೇ ವರ್ಷದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿಯೂ ಪ್ರಧಾನಿಯವರ ನೇತೃತ್ವದಲ್ಲಿ ಇಂತಹ ಉನ್ನತ ಮಟ್ಟದ ಸಭೆಗಳು ನಡೆದಿದ್ದವು.
ಇಂದಿನ ಸಭೆಯಲ್ಲಿ ದೇಶದ ಭದ್ರತೆ, ಇಂಧನ ಪೂರೈಕೆ, ರಸಗೊಬ್ಬರ ಲಭ್ಯತೆ ಹಾಗೂ ವಿದೇಶದಲ್ಲಿರುವ ಭಾರತೀಯರ ಸುರಕ್ಷತೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು. ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಅವರು ಪ್ರಸ್ತುತ ಜಾಗತಿಕ ಭೂರಾಜಕೀಯ ಪರಿಸ್ಥಿತಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬೆಳವಣಿಗೆಗಳು ಹಾಗೂ ಅವು ಭಾರತಕ್ಕೆ ಉಂಟುಮಾಡಬಹುದಾದ ಪರಿಣಾಮಗಳ ಕುರಿತು ಸಮಿತಿಗೆ ವಿವರವಾದ ಮಾಹಿತಿ ನೀಡಿದರು.
ಭಾರತದ ಇಂಧನ ಭದ್ರತೆ ಯಾವುದೇ ರೀತಿಯಲ್ಲಿ ಹಾನಿಯಾಗದಂತೆ ಕೇಂದ್ರ ಸರ್ಕಾರ ಈಗಾಗಲೇ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ದ್ರವೀಕೃತ ನೈಸರ್ಗಿಕ ಅನಿಲ (LNG), ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಮತ್ತು ವಿವಿಧ ಪೆಟ್ರೋಲಿಯಂ ಉತ್ಪನ್ನಗಳ ಪೂರೈಕೆ ನಿರಂತರವಾಗಿ ನಡೆಯುವಂತೆ ಅಗತ್ಯ ಕ್ರಮಗಳನ್ನು ಜಾರಿಗೆ ತರಲಾಗಿದೆ. ವಿವಿಧ ದೇಶಗಳಿಂದ ತೈಲ ಮತ್ತು ಅನಿಲ ಆಮದು ಮಾಡುವ ವ್ಯವಸ್ಥೆಯನ್ನು ಬಲಪಡಿಸಿರುವುದರಿಂದ ದೇಶದಲ್ಲಿ ಇಂಧನ ಕೊರತೆಯ ಆತಂಕ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಚ್ಚಾ ತೈಲದ ಸಾಕಷ್ಟು ದಾಸ್ತಾನು ಲಭ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾಗಾರಗಳು ಶೇ.100ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ಇಂಧನಗಳ ಉತ್ಪಾದನೆ ಮತ್ತು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಅಗತ್ಯವಿದ್ದರೆ ಹೆಚ್ಚುವರಿ ಪೂರೈಕೆ ವ್ಯವಸ್ಥೆ ಕಲ್ಪಿಸುವ ಸಿದ್ಧತೆಯೂ ಸರ್ಕಾರ ಹೊಂದಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಎಲ್ಪಿಜಿ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಜಾಲವನ್ನು ದೇಶಾದ್ಯಂತ ವಿಸ್ತರಿಸಲಾಗುತ್ತಿದೆ. ನ್ಯಾಷನಲ್ ಗ್ಯಾಸ್ ಗ್ರಿಡ್ ವಿಸ್ತರಣೆ, ಎಲ್ಎನ್ಜಿ ಆಮದು ಸಾಮರ್ಥ್ಯ ಹೆಚ್ಚಳ, ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ಜಾಲದ ವಿಸ್ತರಣೆ ಹಾಗೂ ‘ಪೈಪ್ಲೈನ್ ಮೂಲಸೌಕರ್ಯ ಆದೇಶ–2026’ ಅಡಿಯಲ್ಲಿ ಕೊನೆಯ ಹಂತದ ಸಂಪರ್ಕಗಳಿಗೆ ತ್ವರಿತ ಅನುಮೋದನೆ ನೀಡಲಾಗುತ್ತಿದೆ. ಇದರ ಪರಿಣಾಮ ದೇಶದ ವಿವಿಧ ನಗರಗಳಲ್ಲಿ ಪಿಎನ್ಜಿ ಸಂಪರ್ಕಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.
ಮುಂಬರುವ ರಬಿ ಕೃಷಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರಗಳ ಲಭ್ಯತೆ ಕುರಿತೂ ಸಭೆಯಲ್ಲಿ ವಿಶೇಷವಾಗಿ ಪರಿಶೀಲನೆ ನಡೆಸಲಾಯಿತು. ದೇಶೀಯ ಬೇಡಿಕೆಯನ್ನು ಯಾವುದೇ ಅಡಚಣೆಯಿಲ್ಲದೆ ಪೂರೈಸಲು ಅಗತ್ಯ ಪ್ರಮಾಣದ ದಾಸ್ತಾನು ಕಾಯ್ದಿರಿಸುವುದು ಹಾಗೂ ಅಗತ್ಯವಿದ್ದಲ್ಲಿ ಪರ್ಯಾಯ ರಾಷ್ಟ್ರಗಳಿಂದ ರಸಗೊಬ್ಬರ ಆಮದು ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿರುವ ಭಾರತೀಯ ನಾಗರಿಕರು ಹಾಗೂ ಭಾರತೀಯ ನಾವಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಭಾರತೀಯ ನಾವಿಕರ ಕುಟುಂಬಗಳಿಗೆ ಅವರ ಸ್ಥಿತಿಗತಿಯ ಕುರಿತು ಸಮಯೋಚಿತ ಮಾಹಿತಿ, ತುರ್ತು ನೆರವು ಹಾಗೂ ಅಗತ್ಯ ಆಪ್ತಸಮಾಲೋಚನೆ ಒದಗಿಸಲು ವಿಶೇಷ ವ್ಯವಸ್ಥೆ ರೂಪಿಸಬೇಕೆಂದು ಅವರು ನಿರ್ದೇಶಿಸಿದರು.
ಇದಲ್ಲದೆ, ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳನ್ನು ಕ್ಷಣಕ್ಷಣಕ್ಕೂ ಮೇಲ್ವಿಚಾರಣೆ ಮಾಡುವುದು ಅಗತ್ಯವಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ತಕ್ಷಣ ಸ್ಪಂದಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಸಂಬಂಧಿತ ಏಜೆನ್ಸಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕೆಂದು ಪ್ರಧಾನಿ ಕರೆ ನೀಡಿದರು.





