ಬೆಂಗಳೂರು: ನಾಡಿನ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬಿಡದಿ ಟೌನ್ಶಿಪ್ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ತಕ್ಷಣ ಕೈಬಿಡಬೇಕು. ಇಲ್ಲವಾದರೆ ಯೋಜನೆ ಹಿಂಪಡೆಯುವವರೆಗೂ ನಿರಂತರ ಹೋರಾಟ ನಡೆಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯ ಬಿಜಿಎಸ್ ವೃತ್ತದಿಂದ ಸೋಮವಾರ ಆರಂಭವಾದ ಜೆಡಿಎಸ್ನ ಎರಡನೇ ದಿನದ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ದೇವೇಗೌಡರು, ಗ್ರೇಟರ್ ಬೆಂಗಳೂರು ಟೌನ್ಶಿಪ್ ಯೋಜನೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ರೇಟರ್ ಬೆಂಗಳೂರು ಟೌನ್ಶಿಪ್ ಯೋಜನೆಯ ಹೆಸರಿನಲ್ಲಿ ಸುಮಾರು 9,600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ ದೇವೇಗೌಡರು, ರೈತರಿಗೆ ಹೆಚ್ಚಿನ ಬೆಲೆಯ ಆಮಿಷವೊಡ್ಡಿ ಭೂಮಿ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಕ್ರಮವನ್ನು ಜೆಡಿಎಸ್ ಸಹಿಸುವುದಿಲ್ಲ ಎಂದು ಹೇಳಿದರು.
“ನನ್ನ ದೇಹಕ್ಕೆ ವಯಸ್ಸಾಗಿದೆಯೇ ಹೊರತು ಬುದ್ಧಿಗೆ ವಯಸ್ಸಾಗಿಲ್ಲ. 90ರ ಇಳಿವಯಸ್ಸಿನಲ್ಲಿಯೂ ರೈತರ ಪರವಾಗಿ ಹೋರಾಡುವ ಶಕ್ತಿ ನನಗಿದೆ. ಬಿಡದಿಯ ಕಿಂಚಿತ್ತೂ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡುವುದಿಲ್ಲ” ಎಂದು ದೇವೇಗೌಡರು ಗುಡುಗಿದರು.
ಇದೇ ವೇಳೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಿದ ಅವರು, ಆಗಸ್ಟ್ 19ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ರೈತರು ಮಾನಸಿಕವಾಗಿ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.
ಇನ್ನು ಒಕ್ಕಲಿಗರು ಮುಖ್ಯಮಂತ್ರಿಯಾದರೆ ದೇವೇಗೌಡರ ಕುಟುಂಬ ಸಹಿಸುವುದಿಲ್ಲ ಎಂಬ ಆರೋಪಕ್ಕೂ ದೇವೇಗೌಡರು ಪ್ರತಿಕ್ರಿಯಿಸಿದರು. “ಇನ್ನೂ ಎರಡು ವರ್ಷ ಅಧಿಕಾರವಿದೆ. ಆಡಳಿತ ನಡೆಸಲಿ. ಯಾರು ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದರೂ ನಾನು ಬೆಂಬಲಿಸುತ್ತೇನೆ” ಎಂದು ಅವರು ಹೇಳಿದರು.
38 ಕಿ.ಮೀ. ಬೃಹತ್ ಪಾದಯಾತ್ರೆ
ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರುದ್ಧ ಜೆಡಿಎಸ್ನ ಹೋರಾಟ ತೀವ್ರಗೊಂಡಿದೆ. ಬೈರಮಂಗಲ ವೃತ್ತದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ವರೆಗೆ ಒಟ್ಟು 38 ಕಿ.ಮೀ. ಬೃಹತ್ ಪಾದಯಾತ್ರೆ ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಪಾದಯಾತ್ರೆಗೆ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.
ಎರಡನೇ ದಿನದ ಪಾದಯಾತ್ರೆ ಬಿಡದಿಯ ಸಜ್ಜನ್ರಾವ್ ವೃತ್ತದಿಂದ ಆರಂಭಗೊಂಡು ಜೆಕೆ ಟೈರ್ ಗೇಟ್, ಹೆದ್ದಾರಿ ಮಾರ್ಗವಾಗಿ ನೈಸ್ ರೋಡ್ ಜಂಕ್ಷನ್ವರೆಗೆ ಸಾಗಿತು. ಮೂರನೇ ದಿನವಾದ ಆಗಸ್ಟ್ 11ರಂದು ಪಾದಯಾತ್ರೆ ಬೆಂಗಳೂರಿನ ನಗರದ ಒಳಭಾಗ ಪ್ರವೇಶಿಸಿ ಫ್ರೀಡಂ ಪಾರ್ಕ್ ತಲುಪಲಿದೆ. ಬಳಿಕ ಅಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದು, ಎರಡನೇ ದಿನವೂ ಸಾವಿರಾರು ಕಾರ್ಯಕರ್ತರು ಹಾಗೂ ಹೋರಾಟಗಾರರು ಭಾಗವಹಿಸಿದ್ದರು. ಬಿಡದಿ ಟೌನ್ಶಿಪ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜೆಡಿಎಸ್ ಹೋರಾಟ ಮುಂದುವರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಜೆಡಿಎಸ್ ನಡುವಿನ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.





