ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ಗೆ ರಾಜಧಾನಿ ಬೆಂಗಳೂರಿನಲ್ಲಿ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಪ್ರಮುಖ ಕನ್ನಡಪರ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್ಗೆ ಬೆಂಬಲ ನೀಡದ ಹಿನ್ನೆಲೆ ನಗರದ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಸಹಜ ಸ್ಥಿತಿಯಲ್ಲೇ ಮುಂದುವರಿದಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಸಂಚಾರವೂ ಎಂದಿನಂತೆ ನಡೆಯುತ್ತಿದ್ದು, ಪ್ರಯಾಣಿಕರಿಗೆ ಯಾವುದೇ ದೊಡ್ಡ ಮಟ್ಟದ ತೊಂದರೆ ಕಂಡುಬಂದಿಲ್ಲ.
ಬಂದ್ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸಲಾಗಿದೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಮುಂಜಾನೆ 5.30ರ ಸುಮಾರಿಗೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳು ಮತ್ತು ಬೆಂಗಳೂರು-ತಮಿಳುನಾಡು ಗಡಿ ಭಾಗಗಳಲ್ಲೂ ಹೆಚ್ಚಿನ ಪೊಲೀಸ್ ನಿಗಾ ಇರಿಸಲಾಗಿದೆ.
ಬಂದ್ ಹಿನ್ನೆಲೆ ಪ್ರತಿಭಟನೆ ಹಾಗೂ ಧರಣಿಗೆ ಫ್ರೀಡಂ ಪಾರ್ಕ್ನ್ನು ಮಾತ್ರ ನಿಗದಿಪಡಿಸಲಾಗಿದೆ. ಟೌನ್ಹಾಲ್ ಸೇರಿದಂತೆ ನಗರದ ಇತರ ಪ್ರದೇಶಗಳಿಂದ ರ್ಯಾಲಿ ನಡೆಸಲು ಅವಕಾಶ ನೀಡಲಾಗಿಲ್ಲ. ನಿಯಮ ಉಲ್ಲಂಘಿಸಿ ರ್ಯಾಲಿ ನಡೆಸಲು ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದವರನ್ನು ವಶಕ್ಕೆ ಪಡೆಯುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಬಸ್ಗಳ ಸಂಚಾರಕ್ಕೆ ತಡೆ ಉಂಟುಮಾಡುವುದು, ಸಾರ್ವಜನಿಕರಿಗೆ ತೊಂದರೆ ನೀಡುವುದು ಅಥವಾ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಯಾವುದೇ ಆತಂಕಪಡಬೇಕಾಗಿಲ್ಲ. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ನಗರದ ಪ್ರಮುಖ ಸಾರಿಗೆ ಕೇಂದ್ರಗಳಾದ ಮೆಜೆಸ್ಟಿಕ್ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳು ಸಾಮಾನ್ಯವಾಗಿ ಸಂಚರಿಸುತ್ತಿವೆ. ಮೆಜೆಸ್ಟಿಕ್ನಲ್ಲಿ ಎಸಿಪಿ ದೀಪಕ್ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಓಡಾಟಕ್ಕೂ ಯಾವುದೇ ಗಮನಾರ್ಹ ವ್ಯತ್ಯಯ ಉಂಟಾಗಿಲ್ಲ.
ಇದರ ನಡುವೆ, ಬೆಂಗಳೂರು ಹೊರವಲಯದ ಅತ್ತಿಬೆಲೆ ಗಡಿ ಪ್ರದೇಶದಲ್ಲಿ ಬಂದ್ಗೆ ಬೆಂಬಲ ಸೂಚಿಸಿ ‘ಕನ್ನಡ ಜಾಗೃತಿ ವೇದಿಕೆ’ ಪ್ರತಿಭಟನೆ ನಡೆಸಿತು. ರಾಜ್ಯಾಧ್ಯಕ್ಷ ಮಂಜುನಾಥ್ ದೇವ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು. ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಬಾರದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.





