ದಾವಣಗೆರೆ: ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ.
ನಗರದ ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36) ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದವರಲ್ಲಿ ರಮೇಶ್ ಕುಮಾರ್ ಅವರ 9 ವರ್ಷದ ಪುತ್ರ ಹಿತೇಶ್ ಮತ್ತು 3 ವರ್ಷದ ಪುತ್ರಿ ಪ್ರೇರಣಾ ಕೂಡ ಸೇರಿದ್ದಾರೆ. ಆಗಸ್ಟ್ 14ರಂದು ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದ ಕುಟುಂಬ, ಬಳಿಕ ಮನೆಗೆ ವಾಪಸ್ ಬಂದಿಲ್ಲ.
ರಮೇಶ್ ಕುಮಾರ್ ಮೂಲತಃ ದಾವಣಗೆರೆ ತಾಲ್ಲೂಕಿನ ಶ್ಯಾಗಲೆ ಗ್ರಾಮದವರು. ಷೇರು ಹೂಡಿಕೆ ವ್ಯವಹಾರ ನಡೆಸುತ್ತಿದ್ದ ಅವರು, ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿದ್ದ ಮಾಹಿತಿ ಕೂಡ ಕುಟುಂಬದವರ ಗಮನಕ್ಕೆ ಬಂದಿತ್ತು ಎಂದು ತಿಳಿದುಬಂದಿದೆ.
ಆಗಸ್ಟ್ 14ರಂದು ಬೆಂಗಳೂರಿಗೆ ತೆರಳುವುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದ ರಮೇಶ್ ಕುಮಾರ್, ಪತ್ನಿ ಹಾಗೂ ಮಕ್ಕಳೊಂದಿಗೆ ಮನೆಯಿಂದ ಹೊರಟಿದ್ದರು. ಆದರೆ ಅವರು ತಮ್ಮ ಕಾರು ಮತ್ತು ಬೈಕ್ ಅನ್ನು ಮನೆಯ ಬಳಿಯೇ ಬಿಟ್ಟು, ಆಟೋದಲ್ಲಿ ತೆರಳಿದ್ದಾರೆ ಎನ್ನಲಾಗಿದೆ. ಬಳಿಕ ಕುಟುಂಬದವರು ದಾವಣಗೆರೆ KSRTC ಬಸ್ ನಿಲ್ದಾಣಕ್ಕೆ ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಆದರೆ ಬೆಂಗಳೂರಿಗೆ ತೆರಳಿದರೇ ಅಥವಾ ಬೇರೆಡೆಗೆ ಹೋಗಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕುಟುಂಬದ ನಾಲ್ವರೂ ಏಕಾಏಕಿ ಸಂಪರ್ಕಕ್ಕೆ ಸಿಗದಿರುವ ಹಿನ್ನೆಲೆ ಸಂಬಂಧಿಕರು ಆತಂಕಗೊಂಡಿದ್ದಾರೆ. ರಮೇಶ್ ಕುಮಾರ್ ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ.
ರಮೇಶ್ ಕುಟುಂಬದವರು ಸಂಬಂಧಿಕರು ಹಾಗೂ ಪರಿಚಯಸ್ಥರ ಮನೆಗಳಲ್ಲಿಯೂ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಲ್ವರೂ ಒಟ್ಟಿಗೆ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.





