ಶಿವಮೊಗ್ಗ ಆ.25: ನಾಳೆ ಶಿವಮೊಗ್ಗ ನಗರದಲ್ಲಿ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದ್ದು, ನಗರದ ವಿವಿಧ ಭಾಗಗಳಿಂದ ಮೆರವಣಿಗೆಗಳು ಆಗಮಿಸಲಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಬಂದೋಬಸ್ತ್ ಕರ್ತವ್ಯಕ್ಕಾಗಿ 1 ಎಸ್ಪಿ, 3 ಎಎಸ್ಪಿ, 17 ಡಿವೈಎಸ್ಪಿ, 52 ಪೊಲೀಸ್ ನಿರೀಕ್ಷಕರು, 38 ಪೊಲೀಸ್ ಉಪನಿರೀಕ್ಷಕರು ಹಾಗೂ 77 ಸಹಾಯಕ ಪೊಲೀಸ್ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಸುಮಾರು 2,000 ಪೊಲೀಸ್ ಹೆಡ್ ಕಾನ್ಸ್ಟೆಬಲ್ ಮತ್ತು ಕಾನ್ಸ್ಟೆಬಲ್ಗಳು ಹಾಗೂ 1,000 ಗೃಹರಕ್ಷಕ ದಳದ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಹೆಚ್ಚುವರಿ ಭದ್ರತೆಗಾಗಿ 1 RAF ತುಕಡಿ, 1 SAF ತುಕಡಿ, 21 DAR ತುಕಡಿ, 1 QRT ತುಕಡಿ ಹಾಗೂ 12 KSRP ತುಕಡಿಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆ ಸಾಗುವ ಮಾರ್ಗಗಳು ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿ ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಕವಾಯತು ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಗೆ ಬ್ರೀಫಿಂಗ್ ಸಭೆ ನಡೆಸಲಾಯಿತು. ಬಂದೋಬಸ್ತ್ ವೇಳೆ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯಗಳು, ಸಾರ್ವಜನಿಕರೊಂದಿಗೆ ನಡೆದುಕೊಳ್ಳಬೇಕಾದ ರೀತಿ ಹಾಗೂ ಯಾವುದೇ ಅಹಿತಕರ ಬೆಳವಣಿಗೆ ಕಂಡುಬಂದರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ.
ಇದೇ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಹೆಚ್ಚುವರಿ ಪೊಲೀಸ್ ತುಕಡಿಗಳ ಸಿಬ್ಬಂದಿಯೂ ಪಥಸಂಚಲನ ನಡೆಸುವ ಮೂಲಕ ನಗರದಾದ್ಯಂತ ಭದ್ರತಾ ವ್ಯವಸ್ಥೆ ಪ್ರದರ್ಶಿಸಿದರು.
ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಯುವಂತೆ ಸಾರ್ವಜನಿಕರು ಹಾಗೂ ಮೆರವಣಿಗೆಯಲ್ಲಿ ಭಾಗವಹಿಸುವವರು ಪೊಲೀಸರೊಂದಿಗೆ ಸಹಕರಿಸುವಂತೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮೆರವಣಿಗೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಲಿದ್ದು, ನಗರದ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಂತೆಯೇ ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ಹಾಗೂ ಡಿಜೆ ಸಿಸ್ಟಮ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇಂದಿನಿಂದ ಆಗಸ್ಟ್ 28ರವರೆಗೆ ಈ ನಿರ್ಬಂಧಗಳು ಜಾರಿಯಲ್ಲಿರಲಿವೆ.





