ಕೋಲ್ಕತ್ತಾ: ಕೇಂದ್ರ ಕೋಲ್ಕತ್ತಾದ ರಿತುರಾಜ್ ಹೋಟೆಲ್ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ 14 ಶವಗಳನ್ನು ಹೊರತೆಗೆಯಲಾಗಿದ್ದು, ಹಲವಾರು ಜನರನ್ನು ರಕ್ಷಿಸಲಾಗಿದೆ. ಬೆಂಕಿಯ ಕಾರಣವನ್ನು ತಿಳಿಯಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ತಕ್ಷಣದ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಅಗ್ನಿಶಾಮಕ ಸುರಕ್ಷತಾ ಕ್ರಮಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಈ ಘಟನೆಯನ್ನು ದುರಂತ ಎಂದು ಕರೆದಿದ್ದಾರೆ. “ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತಾ ಅಥವಾ ಭದ್ರತಾ ವ್ಯವಸ್ಥೆ ಇರಲಿಲ್ಲ. ನಿಗಮವು ಏನು ಮಾಡುತ್ತಿದೆ ಎಂಬುದು ತಿಳಿದಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.





