ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಸಂಬಂಧಗಳು ತಾತ್ಕಾಲಿಕವಾಗಿ ಶಾಂತಗೊಂಡಿವೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಈ ಘೋಷಣೆಯ ಬೆನ್ನಲ್ಲೇ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸುದ್ದಿಗೋಷ್ಠಿಯೊಂದನ್ನು ಆಯೋಜಿಸಿ, ಮೇ 12 ರಂದು ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸಲಿದೆ ಎಂದು ತಿಳಿಸಿದರು. ಈ ಮಾತುಕತೆಯವರೆಗೆ ಎರಡೂ ರಾಷ್ಟ್ರಗಳು ಕದನ ವಿರಾಮವನ್ನು ಘೋಷಿಸಿವೆ ಎಂದು ಅವರು ಸ್ಪಷ್ಟಪಡಿಸಿದರು.
ಈ ಬೆಳವಣಿಗೆಗೆ ಪ್ರತಿಕ್ರಿಯೆಯಾಗಿ, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಎಕ್ಸ್ನಲ್ಲಿ ತಮ್ಮ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದಿನಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಒಪ್ಪಂದಕ್ಕೆ ಬಂದಿವೆ ಎಂದು ಅವರು ದೃಢಪಡಿಸಿದ್ದಾರೆ. ಆದರೆ, ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ. “ಭಾರತವು ಭಯೋತ್ಪಾದನೆಯ ರೂಪಗಳ ವಿರುದ್ಧ ದೃಢವಾದ ಮತ್ತು ರಾಜಿಯಾಗದ ನಿಲುವನ್ನು ಕಾಯ್ದುಕೊಂಡಿದೆ. ಈ ನಿಲುವು ಭವಿಷ್ಯದಲ್ಲಿಯೂ ಮುಂದುವರಿಯುತ್ತದೆ,” ಎಂದು ಅವರು ತಿಳಿಸಿದ್ದಾರೆ.
ಭಾರತವು ತನ್ನ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವಲ್ಲಿ ಯಾವುದೇ ರಾಜಿಗೆ ಸಿದ್ಧವಿಲ್ಲ ಎಂಬುದನ್ನು ಜೈಶಂಕರ್ ಅವರ ಹೇಳಿಕೆ ಸ್ಪಷ್ಟಪಡಿಸುತ್ತದೆ. ಭಯೋತ್ಪಾದನೆಗೆ ಬೆಂಬಲ ನೀಡುವ ಯಾವುದೇ ಚಟುವಟಿಕೆಗಳ ವಿರುದ್ಧ ಭಾರತ ತನ್ನ ಕಠಿಣ ನೀತಿಯನ್ನು ಮುಂದುವರಿಸಲಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ಈ ಕದನ ವಿರಾಮವು ಶಾಂತಿಯತ್ತ ಒಂದು ಹೆಜ್ಜೆಯಾಗಿದ್ದರೂ, ಭಾರತವು ತನ್ನ ಜಾಗರೂಕತೆಯನ್ನು ಕಡಿಮೆ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.