ರಾಮನಗರ: ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಮಾತನಾಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟ್ಟುನಿಟ್ಟಾಗಿ ಹೇಳಿದ್ರು ಸಹಿತ ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಚರ್ಚೆ ಜೋರಾಗಿದ್ದು, ಹೈಕಮಾಂಡ್ ಮಾತಿಗೂ ಬೆಲೆಯಿಲ್ಲದಂತಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ, ಸ್ಥಳೀಯ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಡಿಕೆ ಶಿವಕುಮಾರ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಡಿಸಿಎಂ “ಡಿಕೆ ಶಿವಕುಮಾರ್ ಮಾದಪ್ಪನಾಣೆಗೂ ಮುಖ್ಯಮಂತ್ರಿಯಾಗುತ್ತಾರೆ” ಎಂದು ಘೋಷಿಸುವ ಮೂಲಕ ಸಿಎಂ ಬದಲಾಗುತ್ತಾರೆ ಎನ್ನುವ ಚರ್ಚೆಗೆ ಇನ್ನಷ್ಟು ಪುಷ್ಟಿ ನೀಡಿದ್ದಾರೆ.
ಹಾರೋಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, “ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ನವರು ಮತ್ತು ಕುಮಾರಸ್ವಾಮಿ ಏನೇ ಹೇಳಿದರೂ ಜನತೆ ಅದನ್ನು ನಂಬುವುದಿಲ್ಲ. ರಾಜ್ಯದ ಜನತೆ ಕಾಂಗ್ರೆಸ್ನ ಪರವಾಗಿದ್ದಾರೆ” ಎಂದು ವಿಶ್ವಾಸದಿಂದ ಹೇಳಿದರು.