ಬೆಂಗಳೂರು, ಸೆಪ್ಟೆಂಬರ್ 26: ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹೈಕಮಾಂಡ್ನಿಂದ ಒಂದಾದ ಮೇಲೊಂದು ಆಘಾತವಾಗುತ್ತಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಬಳಿಕ ಇದೀಗ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಪಕ್ಷದ ವರಿಷ್ಠರು ದೊಡ್ಡ ಶಾಕ್ ನೀಡಿದ್ದಾರೆ.
ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅವರ ಸ್ಥಾನಕ್ಕೆ ಅರುಣ್ ಪಾಟೀಲ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ಪಟ್ಟಿಯನ್ನು ರವಾನಿಸಿದ್ದಾರೆ.
ಸರ್ಕಾರದ ವಿರುದ್ಧ ಅಥವಾ ಪಕ್ಷದ ನಾಯಕರ ವಿರುದ್ಧ ನೇರವಾಗಿ ಮಾತನಾಡುವವರಿಗೆ ಈ ಮೂಲಕ ಖಡಕ್ ಸಂದೇಶವನ್ನು ರವಾನಿಸಲಾಗಿದೆ. ರಾಜು ಕಾಗೆ ಅವರು ತಮ್ಮ ಹೇಳಿಕೆಗಳ ಮೂಲಕ ಸರ್ಕಾರ ಮತ್ತು ಪಕ್ಷದ ಕೆಲವು ನಾಯಕರೊಂದಿಗೆ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.
ರಾಜು ಕಾಗೆ ಅವರು ಕಾಗವಾಡ ಕ್ಷೇತ್ರದಿಂದ ಆಯ್ಕೆಯಾದ ಶಾಸಕರಾಗಿದ್ದು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.





