ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐ ನಡೆಸಲಿದೆ. ಸುಪ್ರೀಂ ಕೋರ್ಟ್ ಸೋಮವಾರ ಈ ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿಂದ ಕೂಡಿದ ಖಂಡಪೀಠ ಈ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಈ ಪ್ರಕರಣದ ಮೇಲ್ವಿಚಾರಣೆ ನಡೆಸಲು ಮೂರು ಸದಸ್ಯರ ಮಂಡಳಿಯನ್ನು ರಚಿಸಿದೆ. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರಿಗೆ ಈ ಮಂಡಳಿಯ ನೇತೃತ್ವ ವಹಿಸಲಾಗಿದೆ. ನ್ಯಾಯಮೂರ್ತಿ ರಸ್ತೋಗಿ ಅವರು ಈ ಪ್ರಕರಣದಲ್ಲಿ ಸಿಬಿಐ ತನಿಖೆಯ ಮೇಲ್ವಿಚಾರಣೆ ನಡೆಸಲು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಪಡೆದಿದ್ದಾರೆ.
ಸೆಪ್ಟೆಂಬರ್ 27ರಂದು ನಟ ವಿಜಯ್ ಅವರು ತಮ್ಮ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಸಮಾವೇಶವನ್ನು ಕರೂರಿನಲ್ಲಿ ಆಯೋಜಿಸಿದ್ದರು. ಸಮಾವೇಶಕ್ಕೆ 10,000 ಜನರು ಬರುವ ನಿರೀಕ್ಷೆ ಇತ್ತು. ಆದರೆ, 27,000ಕ್ಕೂ ಹೆಚ್ಚು ಜನರು ಸೇರಿದ್ದರು. ಈ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿ 41 ಮಂದಿ ಪ್ರಾಣಬಿಟ್ಟಿದ್ದರು, ಅನೇಕರು ಗಾಯಗೊಂಡಿದ್ದರು.
ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ (ಎಸ್ಐಟಿ) ವಹಿಸಿಕೊಳ್ಳುವ ಆದೇಶ ನೀಡಿತ್ತು. ಆದರೆ ವಿಜಯ್ ಅವರ ಪಕ್ಷ ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಎಲ್ಲಾ ಮನವಿಗಳನ್ನು ವಿವರವಾಗಿ ಪರಿಶೀಲಿಸಿದ ಸುಪ್ರೀಂ ಕೋರ್ಟ್ ಈಗ ತನಿಖೆಯನ್ನು ಸಿಬಿಐ ವಹಿಸುವ ಆದೇಶ ನೀಡಿದೆ.
ಸಿಬಿಐ ತನಿಖೆಯಿಂದ ಕರೂರು ಕಾಲ್ತುಳಿತ ಘಟನೆಯ ನಿಜವಾದ ಕಾರಣಗಳು ಬೆಳಕಿಗೆ ಬರುವ ನಿರೀಕ್ಷೆ ಇದೆ. ನ್ಯಾಯಮೂರ್ತಿ ರಸ್ತೋಗಿ ಅವರ ನೇತೃತ್ವದ ಮೇಲ್ವಿಚಾರಣಾ ಮಂಡಳಿ ತನಿಖೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ನಡೆಸಲಿದೆ.