ಬೆಂಗಳೂರು : ಹರಿಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ವ್ಯಾಪಕ ಮತಗಳ್ಳತನ ನಡೆದಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಹಿರಂಗಪಡಿಸಿದ ದಾಖಲೆಗಳನ್ನು ಉಲ್ಲೇಖಿಸಿದ ಅವರು, ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ ಒಂದು ಮತ ನಕಲಿ ಎನ್ನುವುದು ಸ್ಪಷ್ಟವಾಗಿದೆ ಎಂದು ತೀವ್ರ ಟೀಕೆ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ‘ಕರಾಳ ಮುಖ’ವನ್ನು ಬಹಿರಂಗಪಡಿಸಿದ್ದಾರೆ. ಇದಕ್ಕೆ ಮುನ್ನ, ಕರ್ನಾಟಕದ ಮಹದೇವಪುರ ಮತ್ತು ಅಳಂದ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತಗಳ್ಳತನವನ್ನು ರಾಹುಲ್ ಗಾಂಧಿ ಬಯಲು ಮಾಡಿದ್ದರು. ಇಂದು, ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಲಾಯಿತು ಎಂಬುದನ್ನು ದಾಖಲೆಗಳ ಸಹಿತ ಹೇಳಿದ್ದಾರೆ.
ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ, ಲೋಕತಂತ್ರದ ಕತ್ತು ಹಿಸುಕುತ್ತಿದೆ ಎಂದು ಟೀಕಿಸಿದರು. ಈ ದಾಖಲೆಗಳು ಅದಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಭಾರತೀಯ ನಾಗರಿಕರ ಹೆಸರುಗಳನ್ನು ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ಆರೋಪಿಸಲಾಗಿದೆ. ಬ್ರೆಜಿಲ್ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಸಿಕೊಂಡಿರುವುದು ಅವರ ಈ ಕಲಸಕ್ಕೆ ಸಾಕ್ಷಿಯಾಗಿದೆ. ಇದರಿಂದಾಗಿ ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಅದರ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಖಚಿತ.
ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದವು. ಹರಿಯಾಣದ ಮತದಾರರು ಕೂಡ ಬಿಜೆಪಿ ಸರ್ಕಾರವನ್ನು ಬದಲಾಯಿಸಲು ದೃಢ ಸಂಕಲ್ಪ ಮಾಡಿದ್ದರು. ಆದರೆ, ಅಂತಿಮವಾಗಿ ಬಿಜೆಪಿ ಹೇಗೆ ಬಹುಮತ ಪಡೆಯಿತು ಎಂಬ ಪ್ರಶ್ನೆಗೆ ಈ ಮತಗಳ್ಳತನದ ಆರೋಪಗಳೇ ಉತ್ತರ ನೀಡುತ್ತವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಮೇಲಿನ ಆರೋಪಗಳಿಗೆ ಓರೆಕೋರೆಯಾಗಿ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,”ಈ ಬಾರಿಯಾದರೂ ಅವರು ತಮ್ಮ ‘ಮಾಲೀಕರ’ ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ, ಸತ್ಯವನ್ನು ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಹೇಳಿ, ಈ ವಿವಾದಕ್ಕೆ ಕಾನೂನುಬದ್ಧ ಪರಿಹಾರದ ಅಗತ್ಯವನ್ನು ಸೂಚಿಸಿದರು.





