ಶಿವಮೊಗ್ಗ: ವೇಗವಾಗಿ ಬರುತ್ತಿದ್ದ ಖಾಸಗಿ ಸಿಟಿ ಬಸ್, ನಿಯಂತ್ರಣ ತಪ್ಪಿ ಮೂರು ಬೈಕ್ ಹಾಗೂ ಪೊಲೀಸ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಓರ್ವನಿಗೆ ಗಂಭೀರ ಗಾಯವಾಗಿದ್ದು, ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ರೈಲ್ವೇ ಮೇಲ್ಸೇತುವೆಯಿಂದ ಬಸ್ ಇಳಿಯುವ ವೇಳೆ ರಸ್ತೆಯ ಮೇಲೆ ಇದ್ದ ಹಂಪ್ನ್ನು ಚಾಲಕ ಗಮನಿಸದೆ ವೇಗವಾಗಿ ಬಂದಿದ್ದು, ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಮೂರು ಬೈಕ್ಗೆ ಬಸ್ ಡಿಕ್ಕಿ ಹೊಡೆದಿದೆ. ಜೊತೆಗೆ ಪೊಲೀಸ್ ಇಲಾಖೆ ಸಂಚಾರ ನಿಯಂತ್ರಣಕ್ಕಾಗಿ ಅಳವಡಿಸಿದ್ದ ಬ್ಯಾರಿಕೇಡ್ ಕೂಡ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ವೇಳೆಯಲ್ಲಿ ಬೈಕ್ ಪಕ್ಕದಲ್ಲಿ ನಿಂತಿದ್ದ ಒಬ್ಬ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿದ್ದ ಜನರು ಮತ್ತು ವ್ಯಾಪಾರಿಗಳು ತಕ್ಷಣವೇ ಅವರನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಗಾಯಗೊಂಡ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರು ಬೈಕ್ ಸವಾರರು ಸಣ್ಣಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಬಸ್ ಚಾಲಕ ಬಸ್ ನಿಲ್ಲಿಸಿದ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಕೋಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.





