ಕಾರವಾರ: ರಾಜ್ಯ ರಾಜಕಾರಣದಲ್ಲಿ ಮತ್ತೆ ಮುಖ್ಯಮಂತ್ರಿ ಕುರ್ಚಿ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಮತ್ತು ಅದನ್ನು ಹೈಕಮಾಂಡ್ ಮುಂದೆ ಒಟ್ಟಾಗಿ ಒಪ್ಪಿಸಿದ್ದೇವೆ ಎಂದು ಸಂಚಲನ ಹೇಳಿಕೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂಡ್ಲೇ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಡಿಕೆಶಿ, “ಸಿದ್ದರಾಮಯ್ಯ ಅವರು ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಆದರೆ ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವೆ ಒಪ್ಪಂದವಿದೆ. ನಾವಿಬ್ಬರೂ ಒಟ್ಟಾಗಿ ಮಾತುಕತೆ ನಡೆಸಿ, ಹೈಕಮಾಂಡ್ ಅನ್ನು ಒಪ್ಪಿಸಿದ್ದೇವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆಯೇ ನಾವು ಒಟ್ಟಾಗಿ ಸಾಗುತ್ತೇವೆ” ಎಂದು ತಿಳಿಸಿದರು.
“ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ನಾನು ಎಂದೂ ಹೇಳಿಲ್ಲ. ಹೈಕಮಾಂಡ್ ಅವರ ಪರವಾಗಿದ್ದ ಕಾರಣ ಅವರು ಮುಖ್ಯಮಂತ್ರಿ ಆಗಿದ್ದಾರೆ. ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಜೊತೆಗೆ, ಐದು ವರ್ಷಗಳ ಹಿಂದೆ ಈ ದೇವಸ್ಥಾನಕ್ಕೆ ಬಂದು ಪ್ರಾರ್ಥಿಸಿದ್ದೆ. ಆ ಪ್ರಾರ್ಥನೆ ಫಲಿಸಿತು. ಈಗ ಮತ್ತೆ ಬಂದು ದೇವಿಯ ಆಶೀರ್ವಾದ ಪಡೆದಿದ್ದೇನೆ ಎಂದು ಭಾವುಕವಾಗಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆಯೇ “ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದ ಏನೂ ಇಲ್ಲ. ನಾನು ಐದು ವರ್ಷ ಪೂರ್ತಿ ಮುಖ್ಯಮಂತ್ರಿಯಾಗಿರುತ್ತೇನೆ” ಎಂದು ಸ್ಪಷ್ಟಪಡಿಸಿದ್ದರು. ವಿಧಾನಸಭೆಯಲ್ಲಿ ಕೂಡ ಈ ವಿಚಾರಕ್ಕೆ ಉತ್ತರಿಸಿದ್ದ ಸಿದ್ದರಾಮಯ್ಯ, ಹೈಕಮಾಂಡ್ ಆದೇಶಿಸುವವರೆಗೂ ತಾನು ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿದ್ದರು.
ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರನೇ, ಎಲ್ಲಾ ಬಿಚ್ಚಿಡಬೇಕಾ?: ಡಿಕೆಶಿ ವಾಗ್ದಾಳಿ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರವು ಖಜಾನೆಯನ್ನು ಲೂಟಿ ಮಾಡಿ ಹೈಕಮಾಂಡ್ಗೆ ಹಣ ಕಳುಹಿಸುತ್ತಿದೆ ಎಂದು ಆರೋಪಿಸಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆಶಿ ಅವರು, “ಕಲೆಕ್ಷನ್ ಕಿಂಗ್ ಅಂದ್ರೆ ಅದು ಬಿ.ವೈ. ವಿಜಯೇಂದ್ರ. ಅವರ ಕಲೆಕ್ಷನ್, ವರ್ಗಾವಣೆ ದಂದೆಯನ್ನೆಲ್ಲ ಬಿಚ್ಚಿಡಬೇಕಾ? ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರನೇ” ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇತ್ತೀಚೆಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ರಾಜ್ಯ ಖಜಾನೆಯನ್ನು ಲೂಟಿ ಮಾಡಿ, ಆ ಹಣವನ್ನು ಪಕ್ಷದ ಹೈಕಮಾಂಡ್ಗೆ ಕಳುಹಿಸಿ ತೃಪ್ತಿಪಡಿಸುತ್ತಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಬೆಳಗಾವಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಪ್ರತ್ಯುತ್ತರ ನೀಡಿದ್ದಾರೆ. “ವಿಜಯೇಂದ್ರಗೆ ಅನುಭವವೇ ಇಲ್ಲ. ಯಾವ ಖಜಾನೆ ಖಾಲಿಯಾಗಿದೆ ಎಂದು ತಪ್ಪಿಸಿಕೊಂಡು ಮಾತನಾಡುತ್ತಾರೆ. ಸದನಕ್ಕೆ ಬಂದು ನೇರವಾಗಿ ಪ್ರಶ್ನೆ ಕೇಳಲಿ” ಎಂದು ಸವಾಲು ಹಾಕಿದರು.
ವಿಜಯೇಂದ್ರ ಅವರ ವೈಯಕ್ತಿಕ ಆರೋಪಗಳ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು. “ಅವರ ಕಲೆಕ್ಷನ್ ರಾಜಕಾರಣ, ವರ್ಗಾವಣೆ ದಂಧೆಗಳ ಬಗ್ಗೆ ಎಲ್ಲವನ್ನೂ ಬಿಚ್ಚಿಡಬೇಕೇ? ಅವರ ತಂದೆಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಕೆಡಿಸುವ ಕೆಲಸವನ್ನು ವಿಜಯೇಂದ್ರನೇ ಮಾಡಿದ್ದಾರೆ” ಎಂದು ಆರೋಪಿಸಿದರು.
ಇದೇ ವೇಳೆ, ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ರೈತರ ಸಮಸ್ಯೆಗಳ ಬಗ್ಗೆಯೂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರು ಉತ್ತರ ಕರ್ನಾಟಕ ಅಭಿವೃದ್ಧಿ ಪ್ರಶ್ನೆಗೆ ಉತ್ತರ ನೀಡಲಿದ್ದಾರೆ. ಮಹದಾಯಿ ನೀರಾವರಿ ಯೋಜನೆ ಸೇರಿದಂತೆ ನಾನು ಸಹ ಉತ್ತರ ನೀಡುತ್ತೇನೆ” ಎಂದು ಭರವಸೆ ನೀಡಿದರು. ರಾಜ್ಯ ಸರ್ಕಾರ ರೈತರ ಪರವಾಗಿ ನಿಂತಿದೆ ಎಂದು ಹೇಳಿದ ಅವರು, ಕಬ್ಬು ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿದ್ದೇವೆ. ಇದರಿಂದ ಸರ್ಕಾರಕ್ಕೆ ಮತ್ತು ಕಬ್ಬು ಕಾರ್ಖಾನೆಗಳಿಗೆ ಹೊರೆ ಬಿದ್ದಿದೆ. ಆದರೆ ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪರವಾಗಿ ರಾಜ್ಯ ಸರ್ಕಾರ ಯಾವಾಗಲೂ ಇದೆ ಎಂದು ಸ್ಪಷ್ಟಪಡಿಸಿದರು.





