ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ (KMVSTDC)ಕ್ಕೆ ಸಂಬಂಧಿಸಿದ ಬಹುಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸೇರಿದ ಸುಮಾರು 8.07 ಕೋಟಿ ರೂಪಾಯಿ ಮೌಲ್ಯದ ನಾಲ್ಕು ಸ್ಥಿರಾಸ್ತಿಗಳನ್ನು ಇಡಿ ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಅಡಿಯಲ್ಲಿ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಆಸ್ತಿಗಳಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಭೂಮಿ ಮತ್ತು ಕಟ್ಟಡಗಳು ಸೇರಿವೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ನಿಧಿಗಳನ್ನು ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ. ತನಿಖೆಯ ಪ್ರಕಾರ, ನಿಗಮದ ಖಾತೆಗಳಿಂದ ದೊಡ್ಡ ಪ್ರಮಾಣದ ಹಣವನ್ನು ಮೊದಲು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಆ ಹಣವನ್ನು ಶೆಲ್ ಕಂಪನಿಗಳು ಮತ್ತು ಮಧ್ಯವರ್ತಿ ಸಂಸ್ಥೆಗಳ ಮೂಲಕ ಇತರ ವ್ಯಕ್ತಿಗಳಿಗೆ ಸಾಗಿಸಲಾಗಿದೆ ಎನ್ನಲಾಗಿದೆ.
ಇಡಿ ತನಿಖೆಯಲ್ಲಿ ಈ ಹಣ ವರ್ಗಾವಣೆ ಪ್ರಕ್ರಿಯೆ ಪೂರ್ವಯೋಜಿತ ಹಾಗೂ ಸಂಘಟಿತ ರೀತಿಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಪರಾಧದಿಂದ ಲಭಿಸಿದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಇಡಿ ತಿಳಿಸಿದ್ದು, ಆ ಹಣವನ್ನು ಬೇರೆ ಮಾರ್ಗಗಳಲ್ಲಿ ಮರೆಮಾಚಿರಬಹುದು ಅಥವಾ ವಿಲೇವಾರಿ ಮಾಡಿರಬಹುದು ಎಂಬ ಅನುಮಾನವನ್ನೂ ವ್ಯಕ್ತಪಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಇಲಾಖೆ ಹಾಗೂ ಸಿಬಿಐ (CBI) ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿವೆ. ಈ ಎಫ್ಐಆರ್ಗಳ ಆಧಾರದಲ್ಲೇ ಇಡಿ ಹಣಕಾಸು ತನಿಖೆಯನ್ನು ಮುಂದುವರಿಸುತ್ತಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ, ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 13.01 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.





