ಬೆಳಗಾವಿ (ಡಿ.21): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಡಿ ಹಣ ಬಿಡುಗಡೆಗೆ ಕಾಯುತ್ತಿದ್ದ ಲಕ್ಷಾಂತರ ಮಹಿಳಾ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾರೀ ಗುಡ್ ನ್ಯೂಸ್ ನೀಡಿದ್ದಾರೆ. 24ನೇ ಕಂತಿನ ಹಣ ಬಿಡುಗಡೆ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ಅವರು, ಮುಂದಿನ ವಾರದೊಳಗೆ ಎಲ್ಲಾ ಅರ್ಹ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಗೃಹಲಕ್ಷ್ಮಿ ಯೋಜನೆಯಡಿ ಹಣ ಸಿಗುತ್ತದೆಯೇ ಎಂಬ ಅನುಮಾನಗಳಿಗೆ ಉತ್ತರ ನೀಡಿದರು. ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಸೋಮವಾರದಿಂದ ಶನಿವಾರದ ಒಳಗಾಗಿ ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಭರವಸೆ ನೀಡಿದರು.
ಹಲವು ದಿನಗಳಿಂದ ಹಣ ಬಿಡುಗಡೆ ವಿಳಂಬವಾಗಬಹುದು ಎಂಬ ವದಂತಿಗಳು ಹರಡಿದ್ದವು. ಆದರೆ ಇದಕ್ಕೆ ತೆರೆ ಎಳೆದಿರುವ ಸಚಿವರು, ಗೃಹಲಕ್ಷ್ಮಿ ಯೋಜನೆ ಸರ್ಕಾರದ ಅತ್ಯಂತ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಮಹಿಳೆಯರ ಆರ್ಥಿಕ ಭದ್ರತೆಗೆ ಈ ಯೋಜನೆ ಅತ್ಯಂತ ಅಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಹಣ ಬಿಡುಗಡೆಗೆ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು.
ಮೃತಪಟ್ಟ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಬಗ್ಗೆ ಕೇಳಿಬರುತ್ತಿರುವ ಆರೋಪಗಳ ಕುರಿತೂ ಸಚಿವೆ ಸ್ಪಷ್ಟನೆ ನೀಡಿದರು. ಸತ್ತವರ ಖಾತೆಗೆ ಹಣ ಹೋಗುತ್ತಿರುವುದು ತಕ್ಷಣ ಗಮನಕ್ಕೆ ಬರುವುದಿಲ್ಲ. ಇದು ತಾಂತ್ರಿಕ ಸಮಸ್ಯೆಯಿಂದ ಉಂಟಾಗುತ್ತಿರುವ ದೋಷ ಎಂದು ಹೇಳಿದರು.
ಈ ಸಮಸ್ಯೆ ಪರಿಹಾರಕ್ಕಾಗಿ ಮುಖ್ಯ ಕಾರ್ಯದರ್ಶಿಗಳ (CS) ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಮಹತ್ವದ ಸಭೆಗಳು ನಡೆದಿವೆ. ಇನ್ನು ಮುಂದೆ ಈ ರೀತಿಯ ದೋಷಗಳು ಮರುಕಳಿಸದಂತೆ ಹೊಸ ಸಾಫ್ಟ್ವೇರ್ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.
ಮೃತ ಫಲಾನುಭವಿಗಳ ಮಾಹಿತಿ ಸರಿಯಾಗಿ ಪರಿಶೀಲಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲಾಗುತ್ತಿದೆ. ಅವರ ಮೂಲಕ ಮರಣ ಪ್ರಮಾಣ ಪತ್ರಗಳ ಪರಿಶೀಲನೆ ನಡೆಸಿ, ಡೇಟಾ ಅಪ್ಡೇಟ್ ಮಾಡಲಾಗುತ್ತಿದೆ. ಇದರಿಂದ ಸತ್ತವರ ಖಾತೆಗೆ ಹಣ ಹೋಗುವ ಸಮಸ್ಯೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ತಪ್ಪಾಗಿ ಮೃತಪಟ್ಟವರ ಖಾತೆಗೆ ಜಮಾದ ಹಣವನ್ನು ವಾಪಸ್ ಪಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಹೊಣೆಗಾರಿಕೆಯನ್ನು ಆಯಾ ಬ್ಯಾಂಕ್ಗಳಿಗೆ ನೀಡಲಾಗಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳು ಈಗಾಗಲೇ ಎಲ್ಲಾ ಸಂಬಂಧಿತ ಬ್ಯಾಂಕ್ಗಳಿಗೆ ಪತ್ರ ಬರೆದು ನೋಟಿಸ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ತಾಂತ್ರಿಕ ದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.





