ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಒಂದೇ ಕುಟುಂಬದ ಮೂವರು ಸದಸ್ಯರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ನಿವಾಸಿ ಪ್ರಸಾದ್ ರಾವ್ ಅವರ ಕುಟುಂಬವು ತಮಿಳುನಾಡಿನ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಲು ತೆರಳಿತ್ತು. ದರ್ಶನ ಮುಗಿಸಿ ಸಂಸಾರ ಸಮೇತರಾಗಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು.
ದೇವಿನಗರ ಕ್ಯಾಂಪ್ ಸಮೀಪ ಬರುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಸಾದ್ ರಾವ್ ಸೇರಿದಂತೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತವು ಬೆಳಗಿನ ಜಾವ ಸಂಭವಿಸಿದೆ. ದೀರ್ಘ ಪ್ರಯಾಣದ ಆಯಾಸ ಮತ್ತು ಬೆಳಗಿನ ಜಾವದ ನಿದ್ದೆಯ ಮಂಪರಿನಲ್ಲಿ ಚಾಲಕನಿಗೆ ರಸ್ತೆಯ ಮೇಲೆ ಹತೋಟಿ ತಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿರುಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಚಾಕೊಲೇಟ್ ಆಮಿಷವೊಡ್ಡಿ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ
ಹಾಸನ ಜಿಲ್ಲೆಯಲ್ಲಿ ಶಿಕ್ಷಣ ಪಡೆಯಬೇಕಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಕಾಮುಕನ ಅಟ್ಟಹಾಸಕ್ಕೆ ಸಿಲುಕಿ ತಾಯಿಯಾಗಿರುವ ದಾರುಣ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ವಾಹನ ಚಾಲಕ ರಂಜಿತ್ ಎಂಬಾತ ಕಳೆದ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಪ್ರತಿದಿನ ಚಾಕೊಲೇಟ್ ನೀಡಿ ಆಮಿಷವೊಡ್ಡಿ ತನ್ನ ಕಾಮದ ಹಸಿವನ್ನು ನೀಗಿಸಿಕೊಂಡಿದ್ದಾನೆ. ಈ ಪೈಶಾಚಿಕ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಆರೋಪಿ ರಂಜಿತ್ನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಬಾಲಕಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರನ್ನೂ ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಹಾಸನ ಡಿಹೆಚ್ಒ ಅನಿಲ್ ತಿಳಿಸಿದ್ದಾರೆ.





