ಚಿಕ್ಕಬಳ್ಳಾಪುರ: ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ನರಸಿಂಹಮೂರ್ತಿ(27), ನಂದೀಶ್ (25), ಅರುಣ್ (27), ಮತ್ತೋರ್ವ ಮನೋಜ್ (25) ಎನ್ನುವ ನಾಲ್ವರು ಯುವಕರು ಸಾವನ್ನಪ್ಪಿದ್ದು, ಮೃತ ಯುವಕರು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದಾರೆ. ನರಸಿಂಹಮೂರ್ತಿ ಹಾಗೂ ನಂದೀಶ್ ಒಂದೇ ಕುಟುಂಬದ ಅಣ್ಣ ತಮ್ಮಂದಿರು.
ಒಂದೇ ಬೈಕ್ನಲ್ಲಿ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದರು. ಅಜ್ಜವಾರ ಗೇಟ್ ಸಮೀಪದ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಳ್ಳಯ್ಯನಗಿರಿ ಬಳಿ ಭೀಕರ ಅಪಘಾತ: ಪುತ್ತೂರಿನ ಪ್ರವಾಸಿಗರ ಜೀಪ್ ಪಲ್ಟಿ, 7 ಮಂದಿಗೆ ಗಾಯ
ಚಿಕ್ಕಮಗಳೂರು (ಡಿ.25): ರಜಾದಿನಗಳ ಹಿನ್ನಲೆಯಲ್ಲಿ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ವಿವಿಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳಗಳಿಗೆ ಭಾರಿ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದಾರೆ. ಇದರ ಪರಿಣಾಮವಾಗಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರವಾಸಿಗರು ಗಂಟೆಗಟ್ಟಲೇ ರಸ್ತೆಯಲ್ಲೇ ಕಾಯುವಂತಾಗಿದೆ. ಈ ಭಾರಿ ಜನದಟ್ಟಣೆಯ ನಡುವೆಯೇ ದುರ್ಘಟನೆಯೊಂದು ಸಂಭವಿಸಿದ್ದು, ದತ್ತಪೀಠದಿಂದ ಹಿಂದಿರುಗುತ್ತಿದ್ದ ಪ್ರವಾಸಿಗರ ಜೀಪ್ ಪಲ್ಟಿಯಾದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ.
ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಏಳು ಮಂದಿ ಪ್ರವಾಸಿಗರು ತಮ್ಮ ಜೀಪ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕೆಲಸಕ್ಕೆ ರಜೆ ಇದ್ದ ಕಾರಣ ಪ್ರವಾಸದ ಉದ್ದೇಶದಿಂದ ಕುಟುಂಬ ಸಮೇತರಾಗಿ ಧಾರ್ಮಿಕ ಕ್ಷೇತ್ರವಾದ ದತ್ತಪೀಠಕ್ಕೆ ತೆರಳಿದ್ದರು. ದತ್ತಪೀಠ ದರ್ಶನ ಮುಗಿಸಿಕೊಂಡು ಮರಳುವ ವೇಳೆ ತಿರುವುಗಳಿರುವ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ.
ಅಪಘಾತದಿಂದ ಜೀಪ್ನಲ್ಲಿದ್ದ ಏಳು ಮಂದಿಗೂ ಗಾಯಗಳಾಗಿವೆ. ಸ್ಥಳೀಯರು ಹಾಗೂ ಇತರೆ ಪ್ರವಾಸಿಗರು ತಕ್ಷಣವೇ ನೆರವಿಗೆ ಧಾವಿಸಿ, ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಲ್ಲ ಎಂದು ವೈದ್ಯರು ತಿಳಿಸಿದ್ದಾರೆ.





