ಬೆಂಗಳೂರು, ಡಿ. 29: “ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ” ಎಂದು ತಿಳಿಸಿದರು.
ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, “ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ” ಎಂದು ತಿಳಿಸಿದರು.
ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ 40-45 ಟಿಎಂಸಿ ನೀರು ನಿಗದಿ ಮಾಡಬೇಕು: ಡಿ.ಕೆ ಶಿವಕುಮಾರ್
ನವದೆಹಲಿ, ಡಿ.24: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಶಿವಕುಮಾರ್ ಅವರು, “ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ (NWDA) ಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ” ಎಂದರು.
“ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿದ್ದೇವೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು, 18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್ ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 90% ಕೇಂದ್ರ ಸರ್ಕಾರ ಹಾಗೂ 10% ರಾಜ್ಯ ಸರ್ಕಾರ ಭರಿಸಲಿದೆ” ಎಂದು ಮಾಹಿತಿ ನೀಡಿದರು.
“ಸುಪ್ರೀಂ ಕೋರ್ಟ್ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ. ಇನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ” ಎಂದರು.
“ಕೇಂದ್ರ ಸಚಿವರು ನನಗೆ ಮತ್ತೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ” ಎಂದರು.
“ಇನ್ನು ಮಂಗಳವಾರ ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಕೆಲವು ಯೋಜನೆಗಳಿಗೆ ಬಾಕಿ ಇರುವ ಅನುಮೋದನೆಗೆ ಮನವಿ ಮಾಡಿದ್ದೇನೆ. ಮೆಟ್ರೋ 2ನೇ ಹಂತದ ಯೋಜನೆಗೆ 15 ವರ್ಷಗಳ ಹಿಂದೆ ಅಂದರೆ 2010ರ ಜುಲೈನಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿತ್ತು. ಆಗ 26 ಸಾವಿರ ಕೋಟಿ ಇದ್ದ ಯೋಜನೆ ವೆಚ್ಚ ಈಗ 40 ಸಾವಿರ ಕೋಟಿಗೆ ಏರಿಕೆಯಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ 2500 ಕೋಟಿ ಹೆಚ್ಚು ವೆಚ್ಚವಾಗಿದೆ. 2026ರ ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳಿಸಲಾಗುವುದು. ಹೀಗಾಗಿ ಈ ಪರಿಷ್ಕೃತ ದರಕ್ಕೆ ಒಪ್ಪಿಗೆ ನೀಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.





