ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆಯು ಅಂತಿಮವಾಗಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ಹಿನ್ನೆಲೆ
ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ನಿಮಿತ್ತ ನಗರದಾದ್ಯಂತ ಬ್ಯಾನರ್ಗಳನ್ನು ಅಳವಡಿಸಲಾಗುತ್ತಿತ್ತು. ಈ ವೇಳೆ ಜನಾರ್ದನ ರೆಡ್ಡಿ ಅವರ ನಿವಾಸದ ಮುಂಭಾಗ ಬ್ಯಾನರ್ ಕಟ್ಟುವ ವಿಚಾರದಲ್ಲಿ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಈ ಗಲಾಟೆ ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ಸಂಘರ್ಷದ ನಡುವೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದು, ಇದು ಇಡೀ ನಗರವನ್ನು ಸ್ತಬ್ಧಗೊಳಿಸಿದೆ.
ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಕೇಸ್
ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. ಮೃತ ಕಾರ್ಯಕರ್ತನ ಸಾವಿಗೆ ನೇರ ಹೊಣೆ ಹಾಗೂ ಬ್ಯಾನರ್ ಹರಿದು ಹಾಕಿದ ಆರೋಪದ ಮೇಲೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಆರೋಪಿಗಳ ಪಟ್ಟಿ:
-
ಜಿ. ಜನಾರ್ದನ ರೆಡ್ಡಿ (ಮಾಜಿ ಸಚಿವ)
-
ಬಿ. ಶ್ರೀರಾಮುಲು (ಮಾಜಿ ಸಚಿವ)
-
ಜಿ. ಸೋಮಶೇಖರ್ ರೆಡ್ಡಿ
-
ಆಲಿಖಾನ್ (ರೆಡ್ಡಿ ಆಪ್ತ)
-
ದಮ್ಮೂರು ಶೇಖರ್ ಸೇರಿದಂತೆ ಇತರರು.
ಲಾಠಿ ಪ್ರಹಾರ ಮತ್ತು ಪೊಲೀಸ್ ಭದ್ರತೆ
ಗಲಾಟೆ ಸಂಭವಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಟ್ಟಿದ್ದಾರೆ. ಅಂತಿಮವಾಗಿ ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಜನಾರ್ದನ ರೆಡ್ಡಿ ನಿವಾಸದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇನ್ನೊಂದೆಡೆ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಜನಾರ್ದನ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದು, ತಮ್ಮ ಬೆಂಬಲಿಗರೊಂದಿಗೆ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಇದು ರಾಜಕೀಯ ಸಂಘರ್ಷಕ್ಕೆ ಹೊಸ ಆಯಾಮ ನೀಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ-ಕೆಆರ್ಪಿಪಿ ಬೆಂಬಲಿಗರ ನಡುವೆ ಶೀತಲ ಸಮರ ಮುಂದುವರಿದಿದೆ.





