ಬೀದರ್: ಕಲ್ಯಾಣ ಕರ್ನಾಟಕದ ರಾಜಕೀಯ ಭೀಷ್ಮ, ಸಹಕಾರಿ ಧುರೀಣ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10:50ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಭಾಲ್ಕಿಯ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು ಎಂದು ಅವರ ಪುತ್ರ, ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಬೀದರ್ ಜಿಲ್ಲೆಯ ಭಾಲ್ಕಿಯ ಗಾಂಧಿ ಗಂಜ್ನಲ್ಲಿರುವ ಅವರ ನಿವಾಸದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ, ಅವರ ಧರ್ಮಪತ್ನಿಯ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.
1923ರಲ್ಲಿ ಜನಿಸಿದ ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ ಅವರು, ನಂತರ ಸತತವಾಗಿ ರೈತರ ಮತ್ತು ಬಡವರ ಧ್ವನಿಯಾದರು.
1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಇವರು, ಒಟ್ಟು 4 ಬಾರಿ ಶಾಸಕರಾಗಿ ಮತ್ತು 2 ಬಾರಿ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗಾಗಿ ಅವರು ತಮ್ಮ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು ಎಂಬುದು ಅವರ ಶಿಕ್ಷಣ ಪ್ರೇಮಕ್ಕೆ ಸಾಕ್ಷಿ.
1976ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಬಲವಂತದ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ವಿರೋಧಿಸಿದ್ದ ಅವರು, ಜನರ ಮನವೊಲಿಸಿ ಒಂದೇ ದಿನ 2500ಕ್ಕೂ ಹೆಚ್ಚು ಜನರಿಗೆ ಸ್ವಯಂಪ್ರೇರಿತ ಶಸ್ತ್ರಚಿಕಿತ್ಸೆ ಮಾಡಿಸಿ ವಿಶ್ವ ದಾಖಲೆ ಬರೆದಿದ್ದರು. ಈ ಅಪರೂಪದ ಸುದ್ದಿ ಅಂದು ಬಿಬಿಸಿಯಲ್ಲಿ ಪ್ರಸಾರವಾಗಿ ಇಡೀ ವಿಶ್ವದ ಗಮನ ಸೆಳೆದಿತ್ತು.
ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಸಂಘಟಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಹೈದರಾಬಾದ್ ವಿಮೋಚನಾ ಹೋರಾಟಗಾರರಾಗಿ ಮತ್ತು ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಬೀದರ್ ಜಿಲ್ಲೆಯನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲು ಇವರು ನಡೆಸಿದ ಹೋರಾಟ ಅವಿಸ್ಮರಣೀಯ. ಇದಕ್ಕಾಗಿ ಇವರಿಗೆ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿ ಲಭಿಸಿದೆ.
103 ವರ್ಷಗಳ ತುಂಬು ಜೀವನ ನಡೆಸಿದ ಇವರು, ತಮ್ಮ ದೀರ್ಘಾಯುಷ್ಯಕ್ಕೆ ನಿತ್ಯದ ಯೋಗ, ಪ್ರಾಣಾಯಾಮ, ಇಷ್ಟಲಿಂಗ ಪೂಜೆ ಮತ್ತು ಶುದ್ಧ ಸಸ್ಯಾಹಾರವೇ ಕಾರಣ ಎಂದು ಹೇಳುತ್ತಿದ್ದರು. ಇವರ ಜನಪರ ಕಾಳಜಿಯನ್ನು ಮೆಚ್ಚಿ ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರು ಇವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.





