ಬೆಳಗಾವಿ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಹರಿದಾಡುತ್ತಿರುವ ರಾಸಲೀಲೆ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟು ದೊಡ್ಡ ಹುದ್ದೆಯಲ್ಲಿದ್ದವರೇ ಆಗಿರಲಿ, ಅವರ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ಗೆ ಸಂಬಂಧಿಸಿದ ರಾಸಲೀಲೆ ಪ್ರಕರಣದ ಬಗ್ಗೆ ನನಗೆ ಇಂದು ಬೆಳಿಗ್ಗೆ ಮಾಹಿತಿ ದೊರಕಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಂಪೂರ್ಣ ವಿಚಾರಣೆ ನಡೆಸಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಸರ್ಕಾರಿ ಅಧಿಕಾರಿಗಳಿಂದ ಈ ರೀತಿಯ ವರ್ತನೆ ಅಕ್ಷಮ್ಯವಾಗಿದ್ದು, ಸಾರ್ವಜನಿಕ ಸೇವೆಯಲ್ಲಿರುವವರು ಶಿಸ್ತಿನ ಮಿತಿಯಲ್ಲಿ ವರ್ತಿಸಬೇಕು ಎಂದು ಸರ್ಕಾರ ಸ್ಪಷ್ಟವಾಗಿ ನೀಡಿದೆ. ಈ ಪ್ರಕರಣವು ಸರ್ಕಾರದ ಗೌರವ ಹಾಗೂ ಪೊಲೀಸ್ ಇಲಾಖೆಯ ಮರ್ಯಾದೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ತನಿಖೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.
ಇನ್ನೊಂದೆಡೆ, ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಲು ಮುಂದಾಗಿದ್ದು, ಆದರೆ ಗೃಹ ಸಚಿವರು ಭೇಟಿಗೆ ನಿರಾಕರಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಮಚಂದ್ರ ರಾವ್, “ಗೃಹ ಸಚಿವರು ಅನಾರೋಗ್ಯದ ಕಾರಣದಿಂದ ಭೇಟಿಯಾಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋ ಕುರಿತು ಸಮಜಾಯಿಷಿ ನೀಡಿರುವ ರಾಮಚಂದ್ರ ರಾವ್, “ಇದು ಇತ್ತೀಚಿನ ಘಟನೆ ಅಲ್ಲ. ಸುಮಾರು 8 ವರ್ಷಗಳ ಹಿಂದಿನ ಹಳೆಯ ವಿಡಿಯೋ. ಯಾರೋ ದುರುದ್ದೇಶದಿಂದ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಇದೀಗ ವೈರಲ್ ಮಾಡಿದ್ದಾರೆ. ನಾನು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಿನ ಕಚೇರಿಯ ವಿಡಿಯೋವನ್ನು ತಪ್ಪು ಅರ್ಥದಲ್ಲಿ ಹರಿಬಿಟ್ಟಿದ್ದಾರೆ. ಇದು ಸಂಪೂರ್ಣ ಸುಳ್ಳು” ಎಂದು ಹೇಳಿದ್ದಾರೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ, ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ಕಚೇರಿಯೊಳಗೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯಲ್ಲಿ ತೊಡಗಿರುವ ದೃಶ್ಯಗಳು ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.





