ಬೆಂಗಳೂರು: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕರ್ನಾಟಕ ರಾಜ್ಯ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಮಂಜುಳಾ ಮಂಗಳವಾರ ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ವರ್ಷಗಳಿಂದ ಬಿಜೆಪಿ ಮಹಿಳಾ ಮೋರ್ಚಾದಲ್ಲಿ ಸಕ್ರಿಯರಾಗಿದ್ದ ಮಂಜುಳಾ, ಪಕ್ಷದಲ್ಲಿ ಪ್ರಮುಖ ಸ್ಥಾನಕ್ಕೇರಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಖಿನ್ನತೆಯಿಂದ ಹೊರಬರಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.
ಡೆತ್ ನೋಟ್ನಲ್ಲಿ ಏನಿದೆ?
ಪೊಲೀಸರ ತನಿಖೆಯಲ್ಲಿ ಮಂಜುಳಾ ಅವರು ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ “ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆದಿದ್ದಾರೆ.
ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.