ಮುಂಬೈ: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು ಶುಭಾರಂಭ ಮಾಡಿದೆ. ವಾಂಖೇಡೆ ಮೈದಾನದಲ್ಲಿ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರ ಮನಮೋಹಕ ಬ್ಯಾಟಿಂಗ್ ಹಾಗೂ ಬೌಲರ್ಗಳ ಶಿಸ್ತುಬದ್ಧ ಆಟದಿಂದ ಭಾರತ, ಯುಎಸ್ಎ ವಿರುದ್ಧ 29 ರನ್ಗಳ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಆರಂಭದಲ್ಲೇ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾದರು. ಇಶಾನ್ ಕಿಶನ್ (20) ಮತ್ತು ತಿಲಕ್ ವರ್ಮಾ (25) ಉತ್ತಮವಾಗಿ ಆಟವಾಡಿದರೂ, ಮಧ್ಯಮ ಕ್ರಮಾಂಕದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಮತ್ತು ರಿಂಕು ಸಿಂಗ್ ಅಮೆರಿಕದ ಬೌಲಿಂಗ್ ದಾಳಿಗೆ ತತ್ತರಿಸಿ ಅತೀ ಕಡಿಮೆ ಮೊತ್ತಕ್ಕೆ ಪೆವಿಲಿಯನ್ ಸೇರಿದರು. ಭಾರತ 77 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ನಾಯಕ ಸೂರ್ಯಕುಮಾರ್ ಯಾದವ್ ಅಖಾಡಕ್ಕಿಳಿದರು.
ಆರಂಭದಲ್ಲಿ ತಾಳ್ಮೆಯಿಂದ ಆಡಿದ ಸೂರ್ಯ, ಆ ಬಳಿಕ ಕೇವಲ 49 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ಗಳ ನೆರವಿನಿಂದ ಅಜೇಯ 84 ರನ್ ಚಚ್ಚಿದರು. ಈ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ ಭಾರತ ನಿಗದಿತ 20 ಓವರ್ಗಳಲ್ಲಿ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು.
ಅಮೆರಿಕ ಹೋರಾಟಕ್ಕೆ ಬೌಲರ್ಗಳ ಬ್ರೇಕ್
162 ರನ್ಗಳ ಗುರಿ ಬೆನ್ನತ್ತಿದ ಯುಎಸ್ಎ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತು ಅರ್ಶದೀಪ್ ಸಿಂಗ್ ಆರಂಭದಲ್ಲೇ ಆಘಾತ ನೀಡಿದರು. ಕೇವಲ 13 ರನ್ಗಳಿಗೆ 3 ವಿಕೆಟ್ ಕಳೆದುಕೊಂಡ ಅಮೆರಿಕ ತೀವ್ರ ಒತ್ತಡಕ್ಕೆ ಸಿಲುಕಿತು. ಮಧ್ಯಮ ಕ್ರಮಾಂಕದಲ್ಲಿ ಮಿಲಿಂದ್ ಕುಮಾರ್ (34), ಸಂಜಯ್ ಕೃಷ್ಣಮೂರ್ತಿ (37) ಮತ್ತು ಶುಭಂ ರಂಜನೆ (37) ಪ್ರತಿರೋಧ ತೋರಲು ಯತ್ನಿಸಿದರಾದರೂ, ಭಾರತದ ಸಂಘಟಿತ ಬೌಲಿಂಗ್ ದಾಳಿಯ ಮುಂದೆ ಅವರ ಹೋರಾಟ ಫಲ ನೀಡಲಿಲ್ಲ. ಅಂತಿಮವಾಗಿ ಅಮೆರಿಕ 132 ರನ್ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.
ಬೌಲಿಂಗ್ನಲ್ಲಿ ಮಿಂಚಿದ ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದರೆ, ಅರ್ಶದೀಪ್ ಸಿಂಗ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಕಿತ್ತು ಗೆಲುವಿನ ಹಾದಿ ಸುಗಮಗೊಳಿಸಿದರು.





