ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ ಘಟನೆ ನಡೆದಿದೆ. ಈ ಘಟನೆಯಿಂದ ಪೊಲೀಸ್ ಸಿಬ್ಬಂದಿ ಸೇರಿ ಹಲವರಿಗೆ ಗಾಯಗಳಾಗಿದ್ದು, ನಗರದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಘಟನೆಯು ನಗರದ ಕಿಲ್ಲಾ ಓಣಿ ಬಳಿ ನಡೆದಿದ್ದು, ಮೆರವಣಿಗೆ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಸಮೀಪದಲ್ಲಿ ಬಂದಾಗ ಎರಡು ಕಲ್ಲುಗಳು ಬಂದು ಬಿದ್ದಿವೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ತಿಳಿಸಿದ್ದಾರೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿಯವರ ತಲೆಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳದಲ್ಲಿ ತಕ್ಷಣ ಕ್ರಮ ಕೈಗೊಂಡು ಜನರನ್ನು ಚದುರಿಸಿದ್ದಾರೆ.
ಅಲ್ಲದೇ, ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದ ಘಟನೆಯೂ ವರದಿಯಾಗಿದೆ. ಎಚ್ಚರಿಕೆಯಿಂದಿದ್ದ ಪೊಲೀಸರು ಬೆಂಕಿಯನ್ನು ತಕ್ಷಣ ನಂದಿಸಿದ್ದಾರೆ. ತಮ್ಮ ತಳ್ಳುಗಾಡಿ ಸುಟ್ಟುಹೋಗಿದ್ದು, ಚಿಲ್ಲರೆ ಹಣ, ತಕ್ಕಡಿ ಸೇರಿದಂತೆ ಎಲ್ಲವೂ ನಾಶವಾಗಿದೆ ಎಂದು ವ್ಯಾಪಾರಿ ಜನ್ನತಬಿ ದೊಡ್ಡಮನಿ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಮತ್ತು ಬಂದ್ ಎಚ್ಚರಿಕೆ ಘಟನೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಮತ್ತು ಯುವಕರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ಎಸೆದವರನ್ನು ತಕ್ಷಣ ಬಂಧಿಸಬೇಕು ಮತ್ತು ಐಜಿಪಿ ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗಳ ಬಂಧನವಾಗದಿದ್ದರೆ ಬಾಗಲಕೋಟೆ ಬಂದ್ಗೆ ಕರೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಫೆಬ್ರವರಿ 24ರ ಮಧ್ಯರಾತ್ರಿ ವರೆಗೆ ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಆದೇಶದಂತೆ, ಸಾರ್ವಜನಿಕ ಸ್ಥಳದಲ್ಲಿ 4ಕ್ಕಿಂತ ಹೆಚ್ಚು ಜನ ಸೇರದಂತೆ, ಅಪಾಯಕಾರಿ ಶಸ್ತ್ರಾಸ್ತ್ರಗಳೊಂದಿಗೆ ಓಡಾಡದಂತೆ, ಅನುಮತಿಯಿಲ್ಲದ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ವಿಡಿಯೋಗಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ನಗರದಲ್ಲಿ ಉದ್ವಿಗ್ನತೆ ಮುಂದುವರೆದಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ.





