ಬೆಂಗಳೂರು, ಮಾರ್ಚ್ 12: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲ ಪ್ರಮುಖ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಪ್ರತಿಭಟನೆಗೆ ಸಾಕಷ್ಟು ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶೇಷಾದ್ರಿ ರಸ್ತೆಯ ಮೂಲಕ ಹೆಚ್ಚಿನ ವಾಹನ ಸಂಚಾರ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ಆ ಪ್ರದೇಶದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕೆಲವು ಪ್ರಮುಖ ರಸ್ತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ್ದಾರೆ.
ಪೊಲೀಸರ ಮಾಹಿತಿಯಂತೆ, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್ನಿಂದ ಆನಂದ ರಾವ್ ಫ್ಲೈಓವರ್ ಕಡೆಗೆ ಸಾಗುವ ಮಾರ್ಗ, ಓಲ್ಡ್ ಜೆಡಿಎಸ್ ಕಚೇರಿ ಕ್ರಾಸ್, ಶೇಷಾದ್ರಿ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರಿಂದಾಗಿ ಆ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗುತ್ತದೆ.
ಪರ್ಯಾಯ ಮಾರ್ಗಗಳ ವಿವರ
ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ನಿರ್ಬಂಧದ ಹಿನ್ನೆಲೆಯಲ್ಲಿ ಪೊಲೀಸರು ಹಲವು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಹಾಗೂ ರೇಸ್ ಕೋರ್ಸ್ ರಸ್ತೆ ಮೂಲಕ ವಾಹನಗಳು ಸಂಚರಿಸಲು ಸೂಚಿಸಲಾಗಿದೆ.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ತೆರಳುವ ವಾಹನಗಳು ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್ಎಂ, ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್ ಸರ್ಕಲ್ ಹಾಗೂ ನೆಹರು ಸರ್ಕಲ್ ಮೂಲಕ ರೇಸ್ ಕೋರ್ಸ್ ಫ್ಲೈಓವರ್ ರಸ್ತೆಯ ಮೂಲಕ ಸಂಚರಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಚಾಲುಕ್ಯ ಸರ್ಕಲ್ನಿಂದ ಮೈಸೂರು ಬ್ಯಾಂಕ್ ಕಡೆಗೆ ಹೋಗುವ ವಾಹನಗಳು ಚಾಲುಕ್ಯ ಸರ್ಕಲ್, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫ್ಯಾಂಟ್ರಿ ರಸ್ತೆ ಹಾಗೂ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಮೂಲಕ ತಮ್ಮ ಸ್ಥಳವನ್ನು ತಲುಪುವಂತೆ ಸೂಚಿಸಲಾಗಿದೆ.
ಕಾಳಿದಾಸ ರಸ್ತೆ ಮತ್ತು ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ತೆರಳುವ ವಾಹನಗಳು ಕನಕದಾಸ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಸಾಗರ್ ಜಂಕ್ಷನ್ ಕಡೆಗೆ ಸಾಗಬೇಕಾಗಿದೆ. ಅದೇ ರೀತಿ ಮೌರ್ಯ ಸುಬ್ಬಣ್ಣ ಜಂಕ್ಷನ್ನಿಂದ ಫ್ರೀಡಂ ಪಾರ್ಕ್ ಕಡೆಗೆ ಹೋಗುವ ವಾಹನಗಳು ಸುಬ್ಬಣ್ಣ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಆನಂದ ರಾವ್ ಸರ್ಕಲ್ ಕಡೆಗೆ ತೆರಳುವಂತೆ ಸೂಚಿಸಲಾಗಿದೆ.
“ಸಂಚಾರ ಸಲಹೆ/Traffic advisory” pic.twitter.com/5AKNCuDxdM
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 11, 2026
ಟಿನ್ ಫ್ಯಾಕ್ಟರಿ ಕಡೆಗೆ ನಿಧಾನಗತಿಯ ಸಂಚಾರ
ಇನ್ನೊಂದೆಡೆ ನಗರದಲ್ಲಿನ ಮತ್ತೊಂದು ಪ್ರಮುಖ ಮಾರ್ಗವಾದ ಟಿನ್ ಫ್ಯಾಕ್ಟರಿ ರಸ್ತೆಯಲ್ಲಿಯೂ ವಾಹನ ಸಂಚಾರ ನಿಧಾನಗತಿಯಲ್ಲಿದೆ. ದೇವಸಂದ್ರ ಮಾರುಕಟ್ಟೆ ಬಳಿ ಒಂದು ವಾಹನ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದರಿಂದಾಗಿ ಟಿನ್ ಫ್ಯಾಕ್ಟರಿ ಕಡೆಗೆ ತೆರಳುವ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರಿಗೆ ಮನವಿ
ನಗರದ ಮಧ್ಯಭಾಗದಲ್ಲಿ ನಡೆಯುವ ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಸಂಚಾರ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.





