ಬೆಂಗಳೂರು, ಏಪ್ರಿಲ್ 1: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣದಲ್ಲಿ ಸೆಕ್ಷನ್ 17ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡುವಂತೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ತನಿಖೆಗೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ಕೋರ್ಟ್ ರದ್ದುಪಡಿಸಿದೆ.
ಈ ಸಂದರ್ಭದಲ್ಲಿ ಕೋರ್ಟ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ” ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಮೂಲಕ ಭ್ರಷ್ಟಾಚಾರ ನಿಗ್ರಹಕ್ಕೆ ತನಿಖೆ ಅನಿವಾರ್ಯ ಎಂಬ ಸಂದೇಶವನ್ನು ಕೋರ್ಟ್ ನೀಡಿದೆ.
ಪ್ರಕರಣದ ಹಿನ್ನೆಲೆ
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಬಟ್ಟೆ ಬ್ಯಾಗ್ ಖರೀದಿ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಅಂದಿನ ಜೆಡಿಎಸ್ ಶಾಸಕರಾಗಿದ್ದ ಸಾ.ರಾ.ಮಹೇಶ್ ಅವರು ಈ ಹಗರಣವನ್ನು ಬಯಲಿಗೆ ಎಳೆದಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10 ರಿಂದ 13 ರೂಪಾಯಿಗೆ ಸಿಗುತ್ತಿದ್ದ ಬಟ್ಟೆ ಬ್ಯಾಗ್ಗಳನ್ನು 52 ರೂಪಾಯಿಗೆ ಖರೀದಿಸಲಾಗಿದೆ ಎಂದು ಅವರು ಆರೋಪಿಸಿದ್ದರು.
14.71 ಲಕ್ಷ ಬ್ಯಾಗ್ಗಳ ಖರೀದಿಯಲ್ಲಿ ಸುಮಾರು 14 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿತ್ತು. ನಗರಸಭೆ, ಪುರಸಭೆ ಮತ್ತು ಮಹಾನಗರ ಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ಗಳನ್ನು ಖರೀದಿಸಲಾಗಿತ್ತು ಎಂದು ಸಾ.ರಾ.ಮಹೇಶ್ ದೂರಿದ್ದರು. ಕೈಮಗ್ಗ ಅಭಿವೃದ್ಧಿ ನಿಗಮವನ್ನು ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.
ತನಿಖೆಗೆ ಅಡ್ಡಿ
ಈ ಬಗ್ಗೆ ತನಿಖೆ ನಡೆಸುವಂತೆ ಸಾ.ರಾ.ಮಹೇಶ್ ಆಗ್ರಹಿಸಿದಾಗ, ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು. ನಂತರ ಸರ್ಕಾರ ತನಿಖೆಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದೂರುದಾರ ವಕೀಲ ರವಿಚಂದ್ರೇಗೌಡ ಎನ್.ಆರ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿ, ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ನಿರ್ದೇಶಿಸಿದೆ.
ಪ್ರಕರಣದ ಮಹತ್ವ
ಐಎಎಸ್ ಅಧಿಕಾರಿಯೊಬ್ಬರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ತನಿಖೆಗೆ ಅನುಮತಿ ನೀಡುವಂತೆ ಹೈಕೋರ್ಟ್ ಆದೇಶಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರಿಗಳು ತಮ್ಮ ಹುದ್ದೆಯ ದುರುಪಯೋಗ ಪಡೆದುಕೊಂಡಿದ್ದಾರೆ ಎಂಬ ಆರೋಪಗಳು ಸಾಬೀತಾದರೆ, ರೋಹಿಣಿ ಸಿಂಧೂರಿ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.





