ಬೆಂಗಳೂರು (ಜುಲೈ 17): ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಚಿತ್ರದ ಥಿಯೇಟರ್ ಬಿಡುಗಡೆಗೆ ಇದ್ದ ಕಾನೂನು ಅಡ್ಡಿ ಇದೀಗ ದೂರವಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸದ್ಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ‘ಬಾಸ್’ ಚಿತ್ರದ ಕಥೆ ಆ ಪ್ರಕರಣವನ್ನು ಹೋಲುತ್ತದೆ ಎಂದು ಆರೋಪಿಸಿ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ವಿಚಾರಣಾ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯ ನೀಡಿದ ಆದೇಶದಲ್ಲಿ ಯಾವುದೇ ಅಕ್ರಮ ಅಥವಾ ಕಾನೂನುಬಾಹಿರ ದೋಷ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ಆ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ತೀರ್ಪಿನ ನಂತರ ‘ಬಾಸ್’ ಚಿತ್ರದ ಬಿಡುಗಡೆಯ ಮೇಲಿದ್ದ ಪ್ರಮುಖ ಕಾನೂನು ಅಡ್ಡಿ ನಿವಾರಣೆಯಾಗಿದ್ದು, ಚಿತ್ರವನ್ನು ಥಿಯೇಟರ್ಗಳಲ್ಲಿ ಬಿಡುಗಡೆ ಮಾಡಲು ದಾರಿ ಸುಗಮವಾಗಿದೆ.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕನಿಷ್ಠ ಒಂದು ವಾರ ಚಿತ್ರದ ಬಿಡುಗಡೆಯನ್ನು ತಡೆಯುವಂತೆ ಮನವಿ ಮಾಡಿದರು. ಆದರೆ ಹೈಕೋರ್ಟ್ ಈ ಮನವಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದೆ.
ನ್ಯಾಯಾಲಯ, “ವಿಚಾರಣಾ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿದ್ದ ಆದೇಶವನ್ನು ನಾವು ಎತ್ತಿಹಿಡಿದಿದ್ದೇವೆ. ಅಂತಹ ಸಂದರ್ಭದಲ್ಲಿ ಮತ್ತೊಮ್ಮೆ ಬಿಡುಗಡೆಗೆ ತಡೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಅಭಿಪ್ರಾಯಪಟ್ಟಿತು.
ಇದೇ ವೇಳೆ ಚಿತ್ರದ ನಿರ್ಮಾಪಕರಾದ ಸಿರಿ ಪ್ರೊಡಕ್ಷನ್ಸ್ಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಚಿತ್ರದ ಆರಂಭದಲ್ಲಿ ಕನಿಷ್ಠ 30 ಸೆಕೆಂಡುಗಳ ಡಿಸ್ಕ್ಲೈಮರ್ ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಆದೇಶಿಸಿದೆ.
ಆ ಡಿಸ್ಕ್ಲೈಮರ್ನಲ್ಲಿ, ಚಿತ್ರದಲ್ಲಿರುವ ಯಾವುದೇ ಪಾತ್ರ, ಘಟನೆ ಅಥವಾ ಸನ್ನಿವೇಶಗಳು ನಟ ದರ್ಶನ್, ಅವರ ಕುಟುಂಬ, ವೈಯಕ್ತಿಕ ಜೀವನ ಅಥವಾ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದ ನೈಜ ಘಟನೆಗಳಲ್ಲ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಈ ಸಂಬಂಧ ಈಗಾಗಲೇ ನ್ಯಾಯಾಲಯಕ್ಕೆ ನೀಡಿರುವ ಭರವಸೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಿರಿ ಪ್ರೊಡಕ್ಷನ್ಸ್ಗೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಆದೇಶದೊಂದಿಗೆ ‘ಬಾಸ್’ ಚಿತ್ರದ ಬಿಡುಗಡೆಗೆ ಕಾನೂನುಬದ್ಧವಾಗಿ ದಾರಿ ಮತ್ತಷ್ಟು ಸುಗಮವಾಗಿದೆ.
