‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

ಎಂಎಲ್‌ಸಿ ಆಗಿ ಕ್ರೇಜಿಸ್ಟಾರ್ ರವಿಚಂದ್ರನ್ ಗ್ರ್ಯಾಂಡ್ ಎಂಟ್ರಿ..!

Untitled design 2026 08 29T092627.745

ಬೆಂಗಳೂರು: ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿಸ್ಟಾರ್ ಎಂದೇ ಖ್ಯಾತರಾಗಿರುವ ಹಿರಿಯ ನಟ ರವಿಚಂದ್ರನ್ ಅವರು ಇದೀಗ ರಾಜಕೀಯ ಅಖಾಡಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲು ರವಿಚಂದ್ರನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಇದಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ರಾಜ್ಯಪಾಲರಿಂದ ಅಧಿಕೃತ ನಾಮನಿರ್ದೇಶನ ಹೊರಬೀಳುವುದಷ್ಟೇ ಬಾಕಿ ಇದೆ ಎನ್ನಲಾಗಿದೆ.

ಕಲಾ ಕ್ಷೇತ್ರಕ್ಕೆ ರವಿಚಂದ್ರನ್ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರವಿಚಂದ್ರನ್ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ ಎನ್ನಲಾಗಿದೆ. 

ಡಿಕೆಶಿ-ರವಿಚಂದ್ರನ್ ಸ್ಕೂಲ್ ಫ್ರೆಂಡ್ಸ್!

ನಟ ರವಿಚಂದ್ರನ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಲಾ ದಿನಗಳಿಂದಲೂ ಸ್ನೇಹಿತರು. ಈ ಹಳೆಯ ಸ್ನೇಹದ ಹಿನ್ನೆಲೆ ರವಿಚಂದ್ರನ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಪ್ರಸ್ತಾಪಕ್ಕೆ ಡಿಕೆಶಿ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ, ನಿರ್ದೇಶಕ, ನಿರ್ಮಾಪಕ ಹಾಗೂ ಹೊಸ ಪ್ರಯೋಗಗಳಿಗೆ ಹೆಸರಾದ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇದೇ ಕಾರಣಕ್ಕೆ ಕಲಾ ಕ್ಷೇತ್ರದ ಕೊಡುಗೆಯನ್ನು ಪರಿಗಣಿಸಿ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ನಾಮನಿರ್ದೇಶನ ಅಧಿಕೃತವಾದರೆ ರವಿಚಂದ್ರನ್ ಅವರು ಆರು ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. 

ಮೂವರ ನಾಮನಿರ್ದೇಶನಕ್ಕೆ ಮೂರು ಹೆಸರು

ವಿಧಾನ ಪರಿಷತ್‌ನ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡುವ ವಿಚಾರದಲ್ಲೂ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ. ಮೂರು ಸ್ಥಾನಗಳಿಗೆ ತಲಾ ಒಂದು ಹೆಸರನ್ನು ಕಳುಹಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೋಟಾದಲ್ಲಿ ನಟ ರವಿಚಂದ್ರನ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಪ್ರಭಾಕರ್ ಎಂಬವರ ಹೆಸರು ಪ್ರಸ್ತಾಪಗೊಂಡಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ಸುತ್ತಮುತ್ತ ಇರುವ ಕೆಲ ಶಾಸಕರು ಪ್ರಭಾಕರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರ ರಾಜಕೀಯ ಪಯಣದಲ್ಲಿ ಪ್ರಭಾಕರ್ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. 

ಮಂಜುಳಾ ನಾಯ್ಡು ಹೆಸರು ಕೂಡ ಮುನ್ನೆಲೆಗೆ

ಇನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಕೋಟಾದಲ್ಲಿ ಆಪ್ತೆ ಮಂಜುಳಾ ನಾಯ್ಡು ಅವರ ಹೆಸರು ಶಿಫಾರಸಾಗಿದೆ ಎನ್ನಲಾಗಿದೆ. ಮಂಜುಳಾ ನಾಯ್ಡು ಅವರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಕಣಕ್ಕಿಳಿದಿದ್ದರು.

ಹೀಗಾಗಿ ಮೂರು ಸ್ಥಾನಗಳಿಗೆ ರವಿಚಂದ್ರನ್, ಪ್ರಭಾಕರ್ ಹಾಗೂ ಮಂಜುಳಾ ನಾಯ್ಡು ಅವರ ಹೆಸರುಗಳು ಅಂತಿಮ ಪಟ್ಟಿಯಲ್ಲಿ ಇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆಯ ಬಳಿಕ ರಾಜ್ಯ ಸರ್ಕಾರದಿಂದ ಅಧಿಕೃತ ಪ್ರಕ್ರಿಯೆ ಮುಂದುವರಿಯಲಿದೆ.

 

Exit mobile version