ಬೆಂಗಳೂರು: ಭಾರತೀಯ ಚಿತ್ರರಂಗದ ಸಂಗೀತ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ, ಕನ್ನಡಿಗರ ಪಾಲಿನ ಪ್ರೀತಿಯ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ತಮ್ಮ ಮಧುರ ಕಂಠದ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದ ಜಾನಕಮ್ಮನ ಅಗಲಿಕೆ ಸಂಗೀತ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಗಣ್ಯರು ಸ್ಮರಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿ, ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಹಾಗೂ ಕನ್ನಡ ಚಿತ್ರರಂಗದ ಮೇರು ಗಾಯಕಿಯಾಗಿದ್ದರು ಎಂದು ಬಣ್ಣಿಸಿದ್ದಾರೆ.
“ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ. ಅನೇಕ ಗಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಅವರು ಸರಳತೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರವಾಗಿರುತ್ತದೆ” ಎಂದು ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ.… pic.twitter.com/TMRVxWJSXI
— CM of Karnataka (@CMofKarnataka) July 11, 2026
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೂಡ ಎಸ್. ಜಾನಕಿ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನೆಲೆಸಿದ್ದ ಜಾನಕಿ ಅವರು ಕನ್ನಡಿಗರಿಗೆ ಅತ್ಯಂತ ಆತ್ಮೀಯರಾಗಿದ್ದರು. ತಮ್ಮ ಮಧುರ ಧ್ವನಿಯಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದ ಅವರು ಗಾನಲೋಕದಲ್ಲಿ ಎಂದಿಗೂ ಮರೆಯಲಾಗದ ಹೆಸರಾಗಿದ್ದಾರೆ ಎಂದು ಹೇಳಿದ್ದಾರೆ.
“ಜಾನಕಿ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಜರಾಮರ. ಆ ಗಾನ ಸರಸ್ವತಿಯ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಕೂಡ ಎಸ್. ಜಾನಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಕ್ಷಿಣ ಭಾರತದ ‘ಗಾನಕೋಗಿಲೆ’ ಎಂದೇ ಖ್ಯಾತರಾಗಿದ್ದ ಜಾನಕಿ ಅವರು ಆರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸುಮಧುರ ಕಂಠದ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ್ದರು ಎಂದು ಸ್ಮರಿಸಿದ್ದಾರೆ.
ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ವಿವಿಧ ಪ್ರಕಾರದ ಗೀತೆಗಳವರೆಗೆ ಎಲ್ಲ ರೀತಿಯ ಹಾಡುಗಳಿಗೆ ಜೀವ ತುಂಬಿದ್ದ ಜಾನಕಿ ಅವರು ತಮ್ಮ ಸುದೀರ್ಘ ಗಾಯನ ಪಯಣದಲ್ಲಿ ಹಲವು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಅವರ ಕಂಠದ ವೈಶಿಷ್ಟ್ಯ, ಭಾವಪೂರ್ಣ ಗಾಯನ ಹಾಗೂ ಸಂಗೀತದ ಮೇಲಿನ ಅಪಾರ ಪ್ರೀತಿ ಅವರನ್ನು ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರ ಸಾಲಿನಲ್ಲಿ ನಿಲ್ಲಿಸಿದೆ.
ಎಸ್. ಜಾನಕಿ ಅವರು ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಚಿತ್ರರಂಗದಲ್ಲಿ ತಮ್ಮ ಅಮೋಘ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ಅವರ ಹಾಡುಗಳು ಹಲವು ತಲೆಮಾರುಗಳ ಸಂಗೀತ ಪ್ರೇಮಿಗಳಿಗೆ ಸ್ಪೂರ್ತಿಯಾಗಿವೆ.
ಸರಳ ವ್ಯಕ್ತಿತ್ವ, ಅಪಾರ ಪ್ರತಿಭೆ ಮತ್ತು ಸಂಗೀತದ ಮೇಲಿನ ನಿಷ್ಠೆಯಿಂದ ಎಲ್ಲರ ಮನ ಗೆದ್ದಿದ್ದ ಜಾನಕಮ್ಮನ ಅಗಲಿಕೆ ತುಂಬಲಾರದ ನಷ್ಟವಾಗಿದೆ.