ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

Untitled design 2026 04 26T155746.606

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡಾ. ರಾಜ್ ಕುಮಾರ್ ಅವರ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ನಟ ಚೇತನ್ ಅಹಿಂಸಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದೆ. ಚೇತನ್ ಅವರ ಹೇಳಿಕೆಗಳನ್ನು ಪ್ರತಿಭಟಿಸಿ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ನಡುವೆ, ತಮ್ಮ ಹೇಳಿಕೆಗೆ ಅವರು ಇನ್ನೂ ಬದ್ಧರಾಗಿದ್ದು, ತಮ್ಮ ಮೇಲೆ “ದಬ್ಬಾಳಿಕೆ” ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಚೇತನ್ ಅಹಿಂಸಾ ಸ್ಪಷ್ಟನೆ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ಚೇತನ್ ಅಹಿಂಸಾ, ತಮ್ಮ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ಮಾತನಾಡಿ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ನಾನು ಹೇಳಿದ ವಿಚಾರದಲ್ಲಿ ಸತ್ಯವಿದೆ. ಆದರೆ ನನ್ನ ಮೇಲೆ ದಬ್ಬಾಳಿಕೆ ನಡೆಸುವುದನ್ನು ನಾನು ಒಪ್ಪುವುದಿಲ್ಲ. ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶದಿಂದ ನಾನು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ವಿಷಾದ ವ್ಯಕ್ತಪಡಿಸಿದ ಮಾತ್ರಕ್ಕೆ ನಾನು ಹೇಳಿದ ವಿಚಾರ ಸುಳ್ಳಾಗಲ್ಲ ಎಂದು ಕಿಡಿಕಾರಿದ್ದಾರೆ.

ಕ್ಷಮೆ ಯಾಚಿಸುವುದಿಲ್ಲ, ನಿಲುವು ಸ್ಪಷ್ಟ
ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಹಿನ್ನೆಲೆ, ಚೇತನ್ ಅವರು ತಮ್ಮ ನಿಲುವನ್ನು ಮತ್ತಷ್ಟು ಸ್ಪಷ್ಟಪಡಿಸಿದ್ದಾರೆ. ನಾನು ವಿಷಾದ ವ್ಯಕ್ತಪಡಿಸಿದ್ದೇನೆ, ಅಷ್ಟೇ. ಆದರೆ ನಾನು ಹೇಳಿದ್ದು ಸುಳ್ಳಲ್ಲ. ಈಗಲೂ ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಒಂದು ವೇಳೆ ನನ್ನ ಹೇಳಿಕೆಯಿಂದ ಧಕ್ಕೆ ತಂದಿದ್ದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಿ. ಅದನ್ನು ಎದುರಿಸಲು ನಾನು ಸಿದ್ಧ ಎಂದು ಅವರು ಸವಾಲೆಸೆದಿದ್ದಾರೆ.

“ಅಣ್ಣಾವ್ರು ಬೇಡ ಅನ್ನುತ್ತಿದ್ದರು”
ಚೇತನ್ ಅಹಿಂಸಾ ಅವರು ಡಾ. ರಾಜ್ ಕುಮಾರ್ ಅವರ ವ್ಯಕ್ತಿತ್ವವನ್ನು ಮೆಚ್ಚುಗೆಯಿಂದ ನೆನೆಸಿಕೊಂಡರು. ಅವರು ಹೇಳಿದರು, ಅಣ್ಣಾವ್ರು ಬದುಕಿದ್ದಾಗ ಎರಡೂವರೆ ಎಕರೆ ಜಾಗವನ್ನು ನಿಮ್ಮ ಸ್ಮಾರಕಕ್ಕೆ ನೀಡುತ್ತೇವೆ ಎಂದಿದ್ದರೆ, ಅವರೇ ಬೇಡ ಎನ್ನುತ್ತಿದ್ದರು. ಅಂತಹ ಮೇರು ವ್ಯಕ್ತಿ ಅವರು. ಅವರಿಗೆ ಸ್ಟಾರ್ ಸಂಸ್ಕೃತಿ ಇಷ್ಟವಿರಲಿಲ್ಲ. ನಾನು ಪ್ರಚಾರಕ್ಕೋಸ್ಕರ ಈ ರೀತಿ ಹೇಳಿಲ್ಲ. ಇದು ವಿಚಾರಕ್ಕೋಸ್ಕರ ಮಾತ್ರ.” ಎಂದಿದ್ದಾರೆ. 

ಸ್ಟಾರ್ ಸಂಸ್ಕೃತಿ ವಿರೋಧಿ ಚೇತನ್
ರಾಜ್ ಕುಟುಂಬದ ಬಗ್ಗೆಯೂ ಚೇತನ್ ಸ್ಪಷ್ಟನೆ ನೀಡಿದರು. ನನಗೆ ಅಣ್ಣಾವ್ರ ಕುಟುಂಬದ ಬಗ್ಗೆ ಯಾವುದೇ ತಕರಾರು ಇಲ್ಲ. ಅವರ ಅಭಿಮಾನಿ ಬಳಗದ ಬಗ್ಗೆಯೂ ತಕರಾರು ಇಲ್ಲ. ಸರ್ಕಾರದ ಯೋಜನೆಗಳಲ್ಲಿ ಒಬ್ಬರಿಗೆ ಜಾಗ ಕೊಟ್ಟು, ಇನ್ನುಳಿದವರಿಗೆ ಕೊಟ್ಟಿಲ್ಲ ಎಂದರೆ ಚಿತ್ರರಂಗದಲ್ಲಿ ಬೇರೆ ಬೇರೆ ಸಮಸ್ಯೆಗಳು ಆಗುತ್ತವೆ. ಇರುವ ಸಮಸ್ಯೆಗೆ ಪರಿಹಾರ ಸಿಗದು. ನಾನು ಸ್ಟಾರ್ ಸಂಸ್ಕೃತಿಯನ್ನು ವಿರೋಧಿಸುತ್ತೇನೆ ಎಂದು ತಿಳಿಸಿದರು.

ದಬ್ಬಾಳಿಕೆ ಮತ್ತು ಕಾನೂನು ಎಚ್ಚರಿಕೆ
ತಮ್ಮ ಮೇಲೆ ಒತ್ತಡ ತರಲಾಗುತ್ತಿದೆ ಎಂದು ಚೇತನ್ ಅವರು ಆರೋಪಿಸಿದ್ದಾರೆ. ಸೌಜನ್ಯದಿಂದ ಮಾತನಾಡಿದರೆ ಮಾತ್ರ ನಾನು ಬದ್ಧನಾಗಿರುತ್ತೇನೆ. ಆದರೆ ಗೂಂಡಾ ವರ್ತನೆ ಮಾಡಿದರೆ, ಮಹಿಳೆ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದರೆ ಅದಕ್ಕೆ ಕಾನೂನಿನ ಕ್ರಮ ತೆಗೆದುಕೊಳ್ಳಬೇಕು. ಪೊಲೀಸರು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತೇನೆ ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಗಳು ಚಿತ್ರರಂಗದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. ಹಲವು ಕನ್ನಡಪರ ಸಂಘಟನೆಗಳು ಚೇತನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸುತ್ತಿವೆ. ರಾಜ್ ಅಭಿಮಾನಿಗಳು ಭಾರೀ ಪ್ರತಿಭಟನೆಗೆ ಕರೆ ನೀಡಿದ್ದಾರೆ.

Exit mobile version