ಬೆಂಗಳೂರು: ಕನ್ನಡ ಚಿತ್ರರಂಗದ ಅಮರ ನಟ ಡಾ. ರಾಜ್ಕುಮಾರ್ ಅವರ ಸಮಾಧಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಹಿನ್ನೆಲೆ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಏಪ್ರಿಲ್ 24ರಂದು ಡಾ. ರಾಜ್ಕುಮಾರ್ ಅವರ ಜನ್ಮ ದಿನದ ಅಂಗವಾಗಿ ಅನೇಕ ಅಭಿಮಾನಿಗಳು ಸ್ಮರಣೆ ಸಲ್ಲಿಸುತ್ತಿದ್ದ ವೇಳೆ, ನಟ ಚೇತನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಅವರು, “ರಾಜ್ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿರುವುದು ಸರಿಯೇ?” ಎಂದು ಪ್ರಶ್ನಿಸಿ, ಭೂಮಿಯ ಬಳಕೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.
ಅಲ್ಲದೆ, 21ನೇ ಶತಮಾನದಲ್ಲಿ ಭೂಮಿಯ ಮಹತ್ವ ಹೆಚ್ಚಾಗಿದ್ದು, ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಭೂಮಿಯನ್ನು ಹಂಚಿಕೆ ಮಾಡಬೇಕು. ಮತಗಳ ಲಾಭಕ್ಕಾಗಿ ಅಥವಾ ರಾಜಕೀಯ ಉದ್ದೇಶಗಳಿಂದ ಭೂಮಿಯನ್ನು ನೀಡಬಾರದು ಎಂಬ ಅಭಿಪ್ರಾಯವನ್ನೂ ಅವರು ವ್ಯಕ್ತಪಡಿಸಿದ್ದರು. ಈ ಹೇಳಿಕೆ ಹಲವಾರು ಅಭಿಮಾನಿಗಳಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.
ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ರಾಜ್ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅನೇಕರು ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದರ ಬೆನ್ನಲ್ಲೇ ಹಿರಿಯ ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದರು.
ದೂರು ಸ್ವೀಕರಿಸಿದ ಪೊಲೀಸರು ಈಗಾಗಲೇ ಚೇತನ್ ಪೋಸ್ಟ್ ಮತ್ತು ಸಂಬಂಧಿತ ವಿಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ನೀಡಿದ ಪ್ರತ್ಯೇಕ ದೂರುಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಚೇತನ್ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವ ನಿರೀಕ್ಷೆಯಿದೆ.
ಈ ನಡುವೆ, ಸಾ.ರಾ. ಗೋವಿಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಅಣ್ಣಾವ್ರ ವಿಚಾರದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಅಗತ್ಯವಿದ್ದರೆ ಜೈಲಿಗೂ ಹೋಗುತ್ತೇವೆ” ಎಂದು ಕಿಡಿಕಾರಿದ್ದಾರೆ.





