ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಸಂಗೀತ ಲೋಕದಲ್ಲಿ ಅಳಿಸಲಾಗದ ಹೆಜ್ಜೆ ಗುರುತು ಮೂಡಿಸಿರುವ ಜಾನಕಿ ಅವರು ತಮ್ಮ ಅಂತಿಮ ಸಂಸ್ಕಾರ ಮೈಸೂರಿನಲ್ಲೇ ನಡೆಯಬೇಕು ಎಂಬ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಅವರ ಆ ಆಸೆಯನ್ನು ಗೌರವಿಸಿ, ಕುಟುಂಬಸ್ಥರು ಹಾಗೂ ರಾಜ್ಯ ಸರ್ಕಾರ ಮೈಸೂರಿನಲ್ಲೇ ಅಂತ್ಯಕ್ರಿಯೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಜಾನಕಿ ಅವರ ಪುತ್ರ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದ ಹಿನ್ನೆಲೆಯಲ್ಲಿ, ಅವರ ಮೊಮ್ಮಗಳು ಅಪ್ಸರಾ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಸಂಬಂಧಿಕರು ಮತ್ತು ಆಪ್ತರ ಸಮ್ಮುಖದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಬೆಳಗ್ಗೆ 8 ಗಂಟೆಯಿಂದ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನ ಮತ್ತು ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಅಗತ್ಯ ಭದ್ರತೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸಂಜೆ ವೇಳೆಗೆ ಮೈಸೂರು ತಾಲೂಕಿನ ಕಣಿಯನ ಹುಂಡಿಯಲ್ಲಿರುವ ನವೀನ್ ಫಾರಂ ಹೌಸ್ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಗುತ್ತದೆ. ಪೊಲೀಸ್ ಗೌರವ ವಂದನೆ ಸೇರಿದಂತೆ ಸರ್ಕಾರಿ ನಿಯಮಾನುಸಾರ ಎಲ್ಲಾ ಗೌರವಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ.
ಎಸ್. ಜಾನಕಿ ಅವರು ತಮ್ಮ ಅಂತಿಮ ಸಂಸ್ಕಾರ ಮೈಸೂರಿನಲ್ಲೇ ನಡೆಯಬೇಕು ಎಂದು ಬಯಸಿದ್ದರು. ಅವರ ಆ ಇಚ್ಛೆಯನ್ನು ಗೌರವಿಸಿ, ಸರ್ಕಾರ ಹಾಗೂ ಕುಟುಂಬಸ್ಥರ ಸಹಮತದೊಂದಿಗೆ ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಅವರು ಖುದ್ದಾಗಿ ದೂರವಾಣಿಯಲ್ಲಿ ಮಾತನಾಡಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸುವಂತೆ ಸೂಚನೆ ನೀಡಿದ್ದಾರೆ. ಅವರ ನಿರ್ದೇಶನದಂತೆ ಎಲ್ಲ ಅಗತ್ಯ ವ್ಯವಸ್ಥೆಗಳು ನಡೆಯುತ್ತಿವೆ ಎಂದು ಹೇಳಿದರು.
ಸಾರ್ವಜನಿಕರು ಬೆಳಗ್ಗೆ 8 ಗಂಟೆಯ ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನ ಪಡೆದು ತಮ್ಮ ಶ್ರದ್ಧಾಂಜಲಿ ಸಲ್ಲಿಸಬಹುದು. ಎಲ್ಲರೂ ಶಾಂತಿಯುತವಾಗಿ ಸಹಕರಿಸುವಂತೆ ಅವರು ಕೋರಿದರು.
ಎಸ್. ಜಾನಕಿ ಅವರ ಅಂತ್ಯಕ್ರಿಯೆಯ ಸಿದ್ಧತೆಗಳ ಕುರಿತು ಸ್ಥಳೀಯ ಶಾಸಕರು, ಜಾನಕಿ ಅವರ ಕುಟುಂಬಸ್ಥರು, ಮೈಸೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಅಂತಿಮ ದರ್ಶನ, ವಾಹನ ನಿಲುಗಡೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ತಮ್ಮ ಸುಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಎಸ್. ಜಾನಕಿ ಅವರ ಅಗಲಿಕೆಯಿಂದ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಇದೀಗ ಅವರ ಅಂತಿಮ ಯಾತ್ರೆಯಲ್ಲಿ ರಾಜ್ಯ ಸರ್ಕಾರದ ಗೌರವ ನಮನದೊಂದಿಗೆ ಅಭಿಮಾನಿಗಳು, ಕಲಾವಿದರು ಹಾಗೂ ಸಾರ್ವಜನಿಕರು ತಮ್ಮ ಪ್ರೀತಿಯ ಗಾಯಕಿಗೆ ಭಾವಪೂರ್ಣ ವಿದಾಯ ಹೇಳಲಿದ್ದಾರೆ.





