ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ ತೆಲುಗು ಆ್ಯಕ್ಷನ್–ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಇಂದು (ಜೂನ್ 19) ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಸಿನಿಮಾ ಬಿಡುಗಡೆಯ ಮುನ್ನ ಸಮಂತಾ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಿತ್ರದ ನಿರ್ದೇಶಕಿ ಬಿ.ವಿ. ನಂದಿನಿ ರೆಡ್ಡಿ ಹಾಗೂ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ಸಮಂತಾ ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿದ್ದ ಅವರ ಫೋಟೋಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸಮಂತಾ ಅವರಿಗೆ ಯಾವುದೇ ಹೊಸ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಅಥವಾ ಜೀವನದ ಮಹತ್ವದ ಘಟ್ಟಗಳಲ್ಲಿ ತಿರುಪತಿಗೆ ಭೇಟಿ ನೀಡುವ ಅಭ್ಯಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಅವರು ಆಧ್ಯಾತ್ಮಿಕತೆಯತ್ತ ಹೆಚ್ಚು ಒಲವು ತೋರಿಸುತ್ತಿದ್ದು, ಜೀವನದಲ್ಲಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ.
ರಾಜ್ ನಿಡಿಮೋರು ಅವರೊಂದಿಗೆ ವಿವಾಹ ಬಂಧನಕ್ಕೆ ಕಾಲಿಡುವ ಸಂದರ್ಭದಲ್ಲಿಯೂ ಸದ್ಗುರು ಆಶ್ರಮವನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷವಾಗಿತ್ತು. ಇದೀಗ ‘ಮಾ ಇಂಟಿ ಬಂಗಾರಂ’ ಚಿತ್ರದ ಬಿಡುಗಡೆಯ ಮುನ್ನವೂ ಅವರು ತಮ್ಮ ಸಂಪ್ರದಾಯವನ್ನು ಪಾಲಿಸಿದ್ದಾರೆ.
ಈ ಸಿನಿಮಾಗೆ ಸಂಬಂಧಿಸಿದ ಮತ್ತೊಂದು ಕುತೂಹಲಕಾರಿ ಸಂಗತಿಯನ್ನೂ ಸಮಂತಾ ಇತ್ತೀಚೆಗೆ ಬಹಿರಂಗಪಡಿಸಿದ್ದರು. ನಿರ್ದೇಶಕಿ ನಂದಿನಿ ರೆಡ್ಡಿ ಮೊದಲಿಗೆ ಈ ಚಿತ್ರದ ಕಥೆಯನ್ನು ನಟಿ ಸಾಯಿ ಪಲ್ಲವಿ ಅವರಿಗಾಗಿ ಬರೆದಿದ್ದರಂತೆ. ಆದರೆ ದಿನಾಂಕಗಳ ಸಮಸ್ಯೆಯಿಂದಾಗಿ ಸಾಯಿ ಪಲ್ಲವಿ ಈ ಚಿತ್ರದಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ನಂತರ ಕಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಸಮಂತಾ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಯಿತು.
ಇದೀಗ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆಯ ಮುನ್ನವೇ ಮತ್ತೊಂದು ವಿಶೇಷ ಸಾಧನೆ ಮಾಡಿದೆ. ಚಿತ್ರದ ಥಿಯೇಟ್ರಿಕಲ್ ಹಾಗೂ ನಾನ್–ಥಿಯೇಟ್ರಿಕಲ್ ಹಕ್ಕುಗಳಿಗಾಗಿ ಭಾರಿ ಪೈಪೋಟಿ ಉಂಟಾಗಿದ್ದು, ಅದರಿಂದಲೇ ಸಿನಿಮಾ ತನ್ನ ಸಂಪೂರ್ಣ ನಿರ್ಮಾಣ ವೆಚ್ಚವನ್ನು ಬಿಡುಗಡೆಯ ಮುನ್ನವೇ ಮರಳಿ ಪಡೆದಿದೆ ಎಂದು ವರದಿಯಾಗಿದೆ. ಮೊದಲ ದಿನವೇ ಉತ್ತಮ ಓಪನಿಂಗ್ ಪಡೆದುಕೊಂಡಿರುವ ‘ಮಾ ಇಂಟಿ ಬಂಗಾರಂ’ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದರ ಬಗ್ಗೆ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ.
ಇತ್ತೀಚಿನ ವರ್ಷಗಳಲ್ಲಿ ವಿಭಿನ್ನ ಪಾತ್ರಗಳು ಮತ್ತು ಹೊಸ ಕಥಾಹಂದರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸಮಂತಾ ರುತ್ ಪ್ರಭು ಅವರಿಗೆ ‘ಮಾ ಇಂಟಿ ಬಂಗಾರಂ’ ಮತ್ತೊಂದು ವಿಶೇಷ ಚಿತ್ರವಾಗಿದೆ. ಆ್ಯಕ್ಷನ್ ಮತ್ತು ಕಾಮಿಡಿ ಅಂಶಗಳೊಂದಿಗೆ ಮೂಡಿಬಂದಿರುವ ಈ ಸಿನಿಮಾದಲ್ಲಿ ಸಮಂತಾ ಹೊಸ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿತ್ತು. ಭಿನ್ನ ಕಥಾಹಂದರದೊಂದಿಗೆ ತೆರೆಗೆ ಬಂದಿರುವ ಈ ಸಿನಿಮಾ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.
