ನಟ ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್‌: ಮತ್ತೊಬ್ಬ ಆರೋಪಿ ಅರೆಸ್ಟ್‌

Untitled design 2026 01 07T210340.916

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಧರಿಯಪ್ಪ ಎಂದು ಗುರುತಿಸಲಾಗಿದೆ. ಈತ ವಿಜಯಲಕ್ಷ್ಮೀ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪದಗಳನ್ನು ಬಳಸಿಕೊಂಡು ಕಾಮೆಂಟ್‌ಗಳನ್ನು ಮಾಡಿದ್ದಾನೆ ಎಂಬ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಯಾದ ಬಳಿಕ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರಮಂದಿರಗಳ ಬಳಿ ಅಭಿಮಾನಿಗಳಿಗೆ ಶಾಂತಿ ಹಾಗೂ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದರು. ಈ ಸಂದೇಶದ ವೇಳೆ ಅವರು ಕೆಲ ವಿಚಾರಗಳ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದು, ಅದು ಸಾಕಷ್ಟು ಚರ್ಚೆಗೂ ವಿವಾದಕ್ಕೂ ಕಾರಣವಾಗಿತ್ತು. ಇದೇ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ವಿಜಯಲಕ್ಷ್ಮೀ ವಿರುದ್ಧ ಅವಹೇಳನಕಾರಿ, ಅಸಭ್ಯ ಹಾಗೂ ಮಾನಹಾನಿಕರ ಕಾಮೆಂಟ್‌ಗಳನ್ನು ಮಾಡುವುದಕ್ಕೆ ಮುಂದಾದರು.

ಈ ರೀತಿಯ ಅಶ್ಲೀಲ ಕಾಮೆಂಟ್‌‌ಗಳು ಮಿತಿಮೀರಿದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದರು. “ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಅಸಭ್ಯ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆ ಉಂಟಾಗಿದೆ. ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೇನೆ” ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ವಿಜಯಲಕ್ಷ್ಮೀ ಅವರ ದೂರು ದಾಖಲಿಸಿಕೊಂಡ ಸಿಸಿಬಿ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡ ಮೂಲದ ಆಡಿಟರ್ ಪ್ರಶಾಂತ್ ತಳವಾರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಐದನೇ ಆರೋಪಿಯಾಗಿ ಧರಿಯಪ್ಪನನ್ನು ಬಂಧಿಸಲಾಗಿದೆ.

ಸಿಸಿಬಿ ಮೂಲಗಳ ಪ್ರಕಾರ, ಆರೋಪಿಗಳು ನಕಲಿ ಹಾಗೂ ವೈಯಕ್ತಿಕ ಖಾತೆಗಳನ್ನು ಬಳಸಿಕೊಂಡು ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡುತ್ತಿದ್ದರು. ತಾಂತ್ರಿಕ ಸಾಕ್ಷ್ಯಾಧಾರಗಳು, ಐಪಿ ಅಡ್ರೆಸ್‌ಗಳು ಹಾಗೂ ಡಿಜಿಟಲ್ ಫಾರೆನ್ಸಿಕ್ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ. ಬಂಧಿತರಿಂದ ಮೊಬೈಲ್ ಫೋನ್ ಹಾಗೂ ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ.

ವಿಜಯಲಕ್ಷ್ಮೀ ದರ್ಶನ್ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಆರೋಪಿಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Exit mobile version