ಅಶ್ಲೀಲ ಕಾಮೆಂಟ್ ಪ್ರಕರಣ: ನೋಟಿಸ್ ನೀಡಿ 17 ದಿನ ಕಳೆದರೂ ಕೋರ್ಟ್‌‌ಗೆ ಹಾಜರಾಗದ ವಿಜಯಲಕ್ಷ್ಮಿ

BeFunky collage 2026 02 06T122300.029

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿದ್ದ ಪ್ರಕರಣದ ತನಿಖೆಯಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಡಿಸೆಂಬರ್ 24, 2025ರಂದು ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದ ವಿಜಯಲಕ್ಷ್ಮಿ ಅವರು, ತನಿಖೆಯ ಭಾಗವಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಇನ್ನೂ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.

ಜನವರಿ 21, 2026ರಂದು ಸೈಬರ್ ಕ್ರೈಂ ಪೊಲೀಸರು ವಿಜಯಲಕ್ಷ್ಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಇದಾದ ನಂತರ 17 ದಿನಗಳು ಕಳೆದರೂ ಅವರು ಹಾಜರಾಗದೇ ಇರುವುದರಿಂದ ಪೊಲೀಸರು ಬೇಸರ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಬಾರಿ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ನೀಡಿದ್ದರೂ, “ಇಂದು ನಾಳೆ” ಎಂದು ಮೀನಾಮೇಷ ಎಣಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಕರಣದಲ್ಲಿ ವಿಜಯಲಕ್ಷ್ಮಿ ಅವರ ಹೇಳಿಕೆ ದಾಖಲಾದ ಬಳಿಕ ಪೊಲೀಸರು 60 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ನಡೆಸಬೇಕಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಇದೇ ವೇಳೆ, ವಿಜಯಲಕ್ಷ್ಮಿ ಅವರು ಈ ಹಿಂದೆ ಪ್ರಕರಣದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆರೋಪಿಗಳನ್ನು ಬಂಧಿಸಲು ತಡವಾದ ಬಗ್ಗೆ ಕಮಿಷನರ್‌ಗೆ ದೂರು ನೀಡಿದ್ದರು. ನಂತರ ಎಕ್ಸ್ ನಲ್ಲಿ ಅಸಮಾಧಾನ ಹೊರಹಾಕಿದ್ದರು.

ಮತ್ತೊಂದೆಡೆ, ತಮ್ಮ ಮನೆಯಲ್ಲಿ ಸುಮಾರು 3 ಲಕ್ಷ ರೂಪಾಯಿ ಹಣ ಕಳ್ಳತನವಾಗಿದೆ ಎಂದು ದೂರು ನೀಡಿದ್ದ ವಿಜಯಲಕ್ಷ್ಮಿ ಅವರು ಆ ಪ್ರಕರಣದಲ್ಲೂ ವಿಚಾರಣೆಗೆ ಹಾಜರಾಗದೇ ಇದ್ದರು. ಸಿ.ಕೆ. ಅಚ್ಚುಕಟ್ಟು ಪೊಲೀಸರು ಮೂರು ಬಾರಿ ನೋಟಿಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಸೈಬರ್ ಕ್ರೈಂ ಪೊಲೀಸರು ವಿಜಯಲಕ್ಷ್ಮಿ ಅವರನ್ನು ಶೀಘ್ರದಲ್ಲೇ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಕಾನೂನು ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಸೂಚನೆಯೂ ಇದೆ.

Exit mobile version